ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ ಆಗುತ್ತಿದೆ. ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ನೋಡುತ್ತಿದ್ದೇವೆ. ಪರಸ್ಪರ ಜಗಳದಲ್ಲಿ ರಾಜ್ಯ ಕಾಂಗ್ರೆಸ್ ತೊಡಗಿಕೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಒಳಜಗಳ ನಡೆದಿದೆ. ತಮಿಳುನಾಡು, ಕೇರಳದಲ್ಲೂ ಆಡಳಿತದ ವಿಚಾರದಲ್ಲಿ ಸಮಸ್ಯೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು.
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಕರ್ನಾಟಕಕ್ಕೆ ಆಗಮಿಸಿದ್ದ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿಮಗೆಲ್ಲ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬಂಗಾಲದಲ್ಲಿ ಮೊದಲ ಬಾರಿ ಬಿಜೆಪಿಗೆ ಇಷ್ಟು ದೊಡ್ಡ ಆಶೀರ್ವಾದ ಲಭಿಸಿದೆ. ಇದು ಕಾರ್ಯಕರ್ತರ ಶ್ರಮದ ಪರಿಣಾಮ. ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ದಾಖಲೆ ಗೆಲುವು ಲಭಿಸಿದೆ. ಇದು ಹೊಸ ಇತಿಹಾಸ ಬರೆಯುವ ಘಟನೆಗಳು ಎಂದರು.
ರಾಜ್ಯದ ವಿಕಾಸದ ಜತೆ ದೇಶದ ವಿಕಾಸವನ್ನು ನಾವು ಬಯಸುತ್ತೇವೆ. 40 ವರ್ಷದ ಹಿಂದೆ 400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಾಣುತ್ತಿದೆ. ಆದರೂ, ಅವರ ಅಹಂಕಾರವು ಮಿತಿ ಮೀರಿದೆ. ಸಂವಿಧಾನ, ಪ್ರಜಾಪ್ರಭುತ್ವ, ಸಾಂವಿಧಾನಿಕ ಪ್ರಕ್ರಿಯೆಯನ್ನು ಕಡೆಗಣಿಸುತ್ತಾರೆ ಎಂದರು.
ಪ್ರಧಾನಿ ಮೋದಿ ಅವರಿಗೆ ಮೈಸೂರಿನ ಶಾಲು ಹಾಕಿ, ಮೈಸೂರು ಪೇಟ ತೊಡಿಸಿ ಮೋದಿಯ ಪುತ್ಥಳಿ ನೀಡಿ ಗೌರವಿಸಲಾಯಿತು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಮತ್ತು ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಇದ್ದರು.




