ಮಂಗಳೂರು: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಕೇವಲ ಸೈದ್ಧಾಂತಿಕ ಕಲಿಕೆಗೆ ಸೀಮಿತವಾಗದೆ, ಕೌಶಲಾಭಿವೃದ್ಧಿ ಹಾಗೂ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ನಗರದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಅತ್ಯಾಧುನಿಕ ಎಐ (ಕೃತಕ ಬುದ್ಧಿಮತ್ತೆ) ಮತ್ತು ರೊಬಾಟಿಕ್ಸ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಂಫಸಿಸ್ ಫೌಂಡೇಷನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಹಾಗೂ ನ್ಯಾಸ್ಕಾಮ್ ಫೌಂಡೇಷನ್ ಸಹಯೋಗದಲ್ಲಿ ಈ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ.
ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪರಿಣಿತಿ ಗಳಿಸುವ ಅಗತ್ಯವಿದ್ದು, ಉದ್ಯಮದ ಅಗತ್ಯಗಳಿಗೆ ತಕ್ಕಂತೆ ತಮ್ಮನ್ನು ತಾವು ಸಿದ್ಧಗೊಳಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಸಹ್ಯಾದ್ರಿ ಸಂಸ್ಥೆಯ ಕಾರ್ಯವೈಖರಿಯನ್ನು ಮೆಚ್ಚಿದ ಅವರು, ಇಂತಹ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ಉನ್ನತ ಶಿಕ್ಷಣದ ಪರಿವರ್ತನೆಗೆ ಮಾದರಿಯಾಗಿವೆ ಎಂದರು. ವಿದ್ಯಾರ್ಥಿಗಳಿಗೆ ಉದ್ಯಮೋದ್ಯಮಕ್ಕೆ ಅಗತ್ಯವಾದ ಕೌಶಲಗಳನ್ನು ಬೆಳೆಸುವಲ್ಲಿ ಸಂಸ್ಥೆಯ ಬದ್ಧತೆ ಶ್ಲಾಘನೀಯ ಎಂದು ಹೇಳಿದರು.
ಕೃತಕ ಬುದ್ಧಿಮತ್ತೆ ಮತ್ತು ರೊಬಾಟಿಕ್ಸ್ ಪ್ರಯೋಗಾಲಯವು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ನವೀನತೆ ಹಾಗೂ ಉದ್ಯಮ-ಸಂಬಂಧಿತ ಕೌಶಲಗಳನ್ನು ಬೆಳೆಸಲು ನೆರವಾಗಲಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರದ ನಡುವಿನ ಸಂಪರ್ಕವನ್ನು ಬಲಪಡಿಸುವ ವೇದಿಕೆಯಾಗಿ ಇದು ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಎಂಫಸಿಸ್ ಫೌಂಡೇಷನ್ನ ಹಿರಿಯ ಉಪಾಧ್ಯಕ್ಷೆ ದೀಪಾ ನಾಗರಾಜ್, ಕಹಾನಿ ಡಿಸೈನ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ರಾಮನ್ ಮಧೋಕ್, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಕೃಷ್ಣ ಹೆಗ್ಡೆ, ಎಂಫಸಿಸ್ನ ಸಿಎಸ್ಆರ್ ಮುಖ್ಯಸ್ಥ ಸುಮಿತ್ ಚೌಹಾಣ್, ಕೆಡಿಇಎಂ ಉಪಾಧ್ಯಕ್ಷ ಚೇತನ್ ದೀಕ್ಷಿತ್, ಅಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎಸ್. ಇಂಜಗನೇರಿ ಉಪಸ್ಥಿತರಿದ್ದರು.
ಸಹ್ಯಾದ್ರಿ ಕಾಲೇಜಿನ ಸಿಇಒ ಜಾನ್ಸನ್ ಟೆಲ್ಲಿಸ್ ಪ್ರಯೋಗಾಲಯದ ಉದ್ದೇಶ ಹಾಗೂ ಕಾರ್ಯವೈಖರಿಯನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಎಂಬಿಎ ವಿಭಾಗದ ಪ್ರೊ. ಮೋನಿಷಾ ಶೆಟ್ಟಿ ವಂದಿಸಿದರು.
What do you feel about this post?
Like
Love
Happy
Haha
Sad
