ಧಾರವಾಡ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕುಲಪತಿ ಪ್ರೊ. ಖಾನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ವಿಶ್ವವಿದ್ಯಾಲಯ ಈ ಕ್ರಮ ಕೈಗೊಂಡಿದೆ.
ಪಿಎಚ್ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ವರ್ತನೆ ನಡೆಸಿರುವ ಆರೋಪದ ಜೊತೆಗೆ, ಆಕೆ ಅಧ್ಯಯನವನ್ನು ಮಧ್ಯದಲ್ಲೇ ತೊರೆದ ಬಳಿಕ ಮರಳಿ ಬರಲು ಇತರ ವಿದ್ಯಾರ್ಥಿಗಳ ಮೂಲಕ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲೂ ಕೆಲವು ಚಿತ್ರಗಳು ಹರಿದಾಡಿದ್ದು, ಪ್ರಕರಣದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆರೋಪ ಎದುರಿಸುತ್ತಿರುವ ಪ್ರಾಧ್ಯಾಪಕರನ್ನು ತಕ್ಷಣ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದರು. ಪ್ರತಿಭಟನೆಯ ವೇಳೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಒಡೆದು ವಿರೋಧ ದಾಖಲಿಸಿದರು.
ವಿದ್ಯಾರ್ಥಿನಿಯನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಗಂಭೀರವಾಗಿರುವುದರಿಂದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿದ್ದವು. ಆರಂಭದಲ್ಲೇ ವಿಶ್ವವಿದ್ಯಾಲಯ ಕ್ರಮ ಜರುಗಿಸದಿರುವುದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲು ಕಾರಣವಾಯಿತು ಎನ್ನಲಾಗಿದೆ.
ಪ್ರಕರಣದ ಕುರಿತು ವಿವಾದ ಹೆಚ್ಚಾದ ಹಿನ್ನೆಲೆ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಅಮಾನತುಗೊಳಿಸಿರುವುದಾಗಿ ಕುಲಪತಿ ಪ್ರೊ. ಖಾನ್ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad
