ಬೆಂಗಳೂರು: ಬಾಗಲಕೋಟೆ, ದಾವಣಗೆರೆ, ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಇ-ಮೇಲ್ಗಳ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಚಿತ್ರದುರ್ಗದಿಂದ ಮೊದಲು ಈ ಸಂದೇಶ ಬಂದಿದ್ದು ಬಳಿಕ ಬಾಗಲಕೋಟೆಗೆ ರವಾನೆ ಆಗಿರುವುದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಬಂದು ನ್ಯಾಯಾಧೀಶರ ಹಾಲ್ ಸೇರಿದಂತೆ ವಿವಿಧ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿದರು.
ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಕೇರಳದ ವಯನಾಡಿನಿಂದ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಪೊಲೀಸ್ ಇಲಾಖೆ ಎಚ್ಚರಿಕೆ ಕ್ರಮ ಕೈಗೊಂಡಿದೆ. ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗಿದೆ. ಕೋಲಾರ ಜಿಲ್ಲಾ ನ್ಯಾಯಾಲಯದಲ್ಲೂ ಇ-ಮೇಲ್ ಬೆದರಿಕೆ ಹಿನ್ನೆಲೆ ಕೋರ್ಟ್ ಕಾರ್ಯಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ.
ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲೂ ಬಾಂಬ್ ಇಟ್ಟಿರುವುದಾಗಿ ಬಂದ ಅಪರಿಚಿತ ಸಂದೇಶದಿಂದ ಆತಂಕ ಉಂಟಾಗಿ ವಕೀಲರು ಹಾಗೂ ಕಕ್ಷಿದಾರರು ಆವರಣದಿಂದ ಹೊರಬಂದಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ಬಂದು ಸಂಪೂರ್ಣ ತಪಾಸಣೆ ನಡೆಸಿದೆ. ಸಂಪೂರ್ಣ ಪರಿಶೀಲನೆಯ ನಂತರ ಕೋರ್ಟ್ಗಳಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
What do you feel about this post?
Like
Love
Happy
Haha
Sad
