ಕಾರವಾರ: ನೋಂದಣಿ ಅವಧಿ ಮುಗಿದಿದ್ದರೂ ಸರ್ಕಾರಿ ವಾಹನವನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಕಾರಾಗೃಹದ ಸೂಪರಿಂಟೆಂಡೆಂಟ್ ಹೇಮಾವತಿ ಅವರ ವಾಹನವನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ್ ಅವರು ಸಂಚಾರ ನಿಯಮ ಉಲ್ಲಂಘನೆ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾಜುಬಾಗ್ ಸರ್ಕಲ್ ಬಳಿ ಕಾರಾಗೃಹ ಸೂಪರಿಂಟೆಂಡೆಂಟ್ ಅವರ ವಾಹನವನ್ನು ತಡೆದು ತಪಾಸಣೆ ನಡೆಸಿದರು.

ಪರಿಶೀಲನೆ ವೇಳೆ ವಾಹನದ ನೋಂದಣಿ ಅವಧಿ ಮೂರು ತಿಂಗಳ ಹಿಂದೆಯೇ ಮುಗಿದಿರುವುದು ಬೆಳಕಿಗೆ ಬಂದಿದ್ದು, ಸಾರಿಗೆ ಇಲಾಖೆಯ ನಿಯಮಗಳನ್ನು ಪಾಲಿಸದೇ ವಾಹನವನ್ನು ಬಳಸಲಾಗುತ್ತಿದ್ದುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಂಚಾರ ಠಾಣೆಯ ಪಿಎಸ್ ಐ ತಿಳಿಸಿದ್ದಾರೆ.
ಸರ್ಕಾರಿ ವಾಹನಗಳ ಬಳಕೆಯಲ್ಲಿ ನಿಯಮ ಪಾಲನೆ ಕಡ್ಡಾಯವಾಗಿದ್ದು, ಈ ಘಟನೆ ಸ್ಥಳೀಯವಾಗಿ ಗಮನ ಸೆಳೆದಿದ್ದು, ಜಿಲ್ಲಾ ಮಟ್ಟದ ಅಧಿಕಾರಿಯೇ ಈ ರೀತಿ ಕಾನೂನು ಗಾಳಿಗೆ ತೂರಿ ಬೇಕಾಬಿಟ್ಟಿ ಅವಧಿ ಮುಗಿದ ವಾಹನದಲ್ಲಿ ಸಂಚಾರ ಮಾಡುವುದು ಜಿಲ್ಲೆಯ ಮರ್ಯಾದೆಗೆ ಕುಂದು ತಂದಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
What do you feel about this post?
Like
Love
Happy
Haha
Sad
