ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, ಪರಿಸರ ಹಾಗೂ ಇತರ ಇಲಾಖೆಗಳು ಅನಗತ್ಯವಾಗಿ ಶಿಕ್ಷಣ ಸಂಸ್ಥೆಗಳಿಗೆ ತೊಂದರೆ ನೀಡದೆ ಮಾರ್ಗದರ್ಶನ ನೀಡಬೇಕು ಎಂದರು.

ಕುಪ್ಮಾ ರಾಜ್ಯ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ಸಮಸ್ಯೆಗಳನ್ನು ಸಂಘಟಿತವಾಗಿ ಪರಿಹರಿಸುವಲ್ಲಿ ಕುಪ್ಮಾ ಪ್ರಮುಖ ಪಾತ್ರ ವಹಿಸಿದೆ ಎಂದರು. ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದರೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪದವಿ ಪೂರ್ವ ಶಿಕ್ಷಣ ಇಲಾಖೆಯು ವರ್ಗಾವಣೆ ಪ್ರಮಾಣಪತ್ರ (ಟಿಸಿ) ವಿತರಣೆಗೆ ಡಿಜಿಲಾಕರ್ ವ್ಯವಸ್ಥೆ ಜಾರಿಗೆ ತರುವ ವಿಚಾರದಲ್ಲಿ ಖಾಸಗಿ ಅನುದಾನರಹಿತ ಕಾಲೇಜುಗಳಿಗೆ ವಿನಾಯಿತಿ ದೊರಕುವಂತೆ ಕುಪ್ಮಾ ಪ್ರಯತ್ನಿಸಿದೆ ಎಂದು ತಿಳಿಸಿದರು.
ರಾಜ್ಯ ಗೌರವಾಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಿನ ತೆರಿಗೆ ವ್ಯತ್ಯಾಸವನ್ನು ನಿವಾರಿಸಬೇಕು. ಎಸ್ಟಿಪಿ ಅಳವಡಿಕೆ ಸೇರಿದಂತೆ ವಿವಿಧ ನಿಯಮಗಳಿಂದ ಸಂಸ್ಥೆಗಳ ಮೇಲೆ ಹೆಚ್ಚುವರಿ ಹೊರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಗೌರವಾಧ್ಯಕ್ಷ ಡಾ. ಸಂಜೀವ ರೈ, ಜಿಲ್ಲಾ ಘಟಕದ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ಡಾ. ಮಂಜುನಾಥ್ ರೇವಣ್ಕರ್ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಅನುದಾನರಹಿತ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ವಾಣಿ ಕಾಲೇಜಿನ ಆಡಳಿತ ಮಂಡಳಿ, ಕಾಲೇಜು ಬಸ್ಗಳಲ್ಲಿ ಅಳವಡಿಸಿರುವ ಪ್ಯಾನಿಕ್ ಬಟನ್ಗಳ ವಾರ್ಷಿಕ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿತು.
ಉಪನ್ಯಾಸಕ ಕರುಣಾಕರ ಬಳ್ಕೂರು ನಿರೂಪಿಸಿ ವಂದಿಸಿದರು.
What do you feel about this post?
Like
Love
Happy
Haha
Sad



