ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. ಸರ್ಕಾರದ ಕಾರ್ಯವೈಖರಿಯ ಬಗ್ಗೆ ಕಾಂಗ್ರೆಸ್ನ ಹಲವು ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಇದಕ್ಕೆ ಸಾಕ್ಷಿ ಎಂದರು.
ರಾಜ್ಯದಲ್ಲಿ ಹಿಂದೆ ಹೆಚ್ಚುವರಿ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಕೊರತೆ ಬಜೆಟ್ ಮಂಡನೆಯಾಗುತ್ತಿದ್ದು, ಸರ್ಕಾರ ಸಾಲದ ಮೇಲೆ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಸಾಕು ಎಂದು ಸರ್ಕಾರವೇ ಹೇಳಿದ್ದರೂ, ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡುತ್ತಿರುವುದು ಏಕೆ ಎಂಬ ಪ್ರಶ್ನೆ ಉದ್ಭವಿಸಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಿನಬಳಕೆ ವಸ್ತುಗಳು, ಹಾಲು ಹಾಗೂ ಮದ್ಯ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿದೆ ಎಂದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಎಸ್ಸಿಪಿ–ಟಿಎಸ್ಪಿ ಅನುದಾನವನ್ನೂ ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ಹಣಕಾಸು ಶಿಸ್ತು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ಜಗದೀಶ ನಾಯಕ ಮೊಗಟಾ, ಮನೋಜ್ ಭಟ್, ಸುನೀಲ್ ಸೋನಿ, ಸುಭಾಷ್ ಗುನಗಿ, ಸಂಜೀವ ಸಾಳುಂಕೆ ಹಾಗೂ ಕಿಶನ್ ಕಾಂಬ್ಳೆ ಇದ್ದರು.
What do you feel about this post?
Like
Love
Happy
Haha
Sad



