ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದೇ ಸರ್ಕಾರದ ಆದ್ಯತೆ: ಸಚಿವ ಖಾದರ್, ಜಿಲ್ಲಾಡಳಿತ ಸನ್ನದ್ಧ, ಡಿಸಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ಶಿರಸಿ

Spread the love

ಕಾರವಾರ: ಪ್ರಕೃತಿ ವಿಕೋಪಗಳು ಯಾವಾಗ, ಹೇಗೆ ಸಂಭವಿಸುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರು ಹಾಗೂ ಸಾರ್ವಜನಿಕರ ನೋವಿಗೆ ತಕ್ಷಣ ಸ್ಪಂದಿಸಿ, ಅವರಿಗೆ ನೆಮ್ಮದಿಯ ಜೀವನ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

<

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಪೂರ್ವತಯಾರಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪದಂತಹ ತುರ್ತು ಪರಿಸ್ಥಿತಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದೇ ಕುಟುಂಬದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಯಾವುದೇ ಸಮಯದಲ್ಲಿ ತುರ್ತು ಕರೆಗಳು ಬರಬಹುದಾದ್ದರಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು 24 ಗಂಟೆಯೂ ಜಾಗರೂಕರಾಗಿ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ತುರ್ತು ಪರಿಹಾರಕ್ಕಾಗಿ 61 ಕೋಟಿ ಲಭ್ಯವಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದ ಸಮಿತಿಗಳು ರಚನೆಯಾಗಿದ್ದು, ಪ್ರವಾಹ ಅಥವಾ ಮಳೆಯಿಂದ ಮನೆಗಳಿಗೆ ಹಾನಿಯಾದ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ನಿಯಮಾನುಸಾರ ತಾತ್ಕಾಲಿಕ ಪರಿಹಾರವನ್ನು ತ್ವರಿತವಾಗಿ ವಿತರಿಸಬೇಕು. ಪರಿಹಾರ ವಿತರಣೆಯಲ್ಲಿ ವಿಳಂಬವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಳೆಗಾಲದಲ್ಲಿ ವಿಪತ್ತುಗಳ ಸಂಭವ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಸಾರ್ವಜನಿಕ ಸೇವೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಹೇಳಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಜ್ವರ ಸೇರಿದಂತೆ ಯಾವುದೇ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಸ್ವಯಂ ಚಿಕಿತ್ಸೆ ಪಡೆಯದೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯರು ಹಾಗೂ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ತಾತ್ಕಾಲಿಕ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಕಾರ್ಯಕ್ರಮ ಅಧಿಕಾರಿಗಳು ಕಡ್ಡಾಯವಾಗಿ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಣೆ ವಹಿಸಬೇಕು. ಅಗತ್ಯವಿದ್ದರೆ ನಿವೃತ್ತ ವೈದ್ಯರನ್ನು ಸೇವೆಗೆ ಬಳಸಿಕೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮುಂದಿನ 41 ವಾರಗಳಿಗೆ ಸಾಕಾಗುವಷ್ಟು ಮೇವನ್ನು ದಾಸ್ತಾನು ಮಾಡಿಕೊಳ್ಳುವಂತೆ ಸೂಚಿಸಿದ ಸಚಿವರು, ಅನಾವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.

ರಾಷ್ಟ್ರೀಯ ಹೆದ್ದಾರಿಗಳ ಅಪಾಯಕಾರಿ ಪ್ರದೇಶಗಳಲ್ಲಿ ಭೂಕುಸಿತ ತಡೆಯಲು ರಕ್ಷಣಾತ್ಮಕ ತಡೆಗೋಡೆ ನಿರ್ಮಿಸಬೇಕು. ಇದರಲ್ಲಿ ನಿರ್ಲಕ್ಷ್ಯ ಕಂಡುಬಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ವಿಶ್ವವಿಖ್ಯಾತ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಒಳಗೆ ಕೊಳಚೆ ನೀರು ಸೇರುತ್ತಿರುವ ವಿಚಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಖಾಸಗಿ ತಜ್ಞರಿಂದ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಾತನಾಡಿ, ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದೆ. ಜಿಲ್ಲಾಧಿಕಾರಿ ಕಚೇರಿ, ಪೊಲೀಸ್ ಅಧೀಕ್ಷಕರ ಕಚೇರಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ನಿರಂತರ ನಿಯಂತ್ರಣ ಕೊಠಡಿಗಳನ್ನು ಆರಂಭಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ 294 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಈವರೆಗೆ ಜಿಲ್ಲೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಎರಡು ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 34 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಎಲ್ಲ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಸತೀಶ ಕೆ. ಸೈಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಕೆ. ದಿನಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಎಡಿಸಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *