ಕಡಬ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಉಪ್ಪಿನಂಗಡಿ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸುಮಾರು 45 ಕಿಲೋಮೀಟರ್ ವ್ಯಾಪ್ತಿಯನ್ನು ಕಡಬ ತಾಲೂಕಿನ 9 ಗ್ರಾಮ ಪಂಚಾಯತ್ಗಳಲ್ಲಿ ಶನಿವಾರ ಏಕಕಾಲದಲ್ಲಿ ಸ್ವಚ್ಛಗೊಳಿಸುವ ಮೂಲಕ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ಕಡಬ ತಾಲೂಕು ಪಂಚಾಯತ್, ವಿವಿಧ ಗ್ರಾಮ ಪಂಚಾಯತ್ಗಳು, ಕಡಬ ಪಟ್ಟಣ ಪಂಚಾಯತ್ ಹಾಗೂ ವಿವಿಧ ಸಂಘ–ಸಂಸ್ಥೆಗಳು ಮತ್ತು ಇಲಾಖೆಗಳ ಸಹಯೋಗದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕೊಯಿಲ, ರಾಮಕುಂಜ, ಆಲಂಕಾರು, ಪೆರಾಬೆ, ಕುಟ್ರುಪಾಡಿ, ಮರ್ಧಾಳ, ಐತ್ತೂರು, ಬಿಳಿನೆಲೆ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆದ್ದಾರಿ ಬದಿಯ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿ, ತಂಡಗಳನ್ನು ರಚಿಸಿ ಶ್ರಮದಾನ ನಡೆಸಲಾಯಿತು.
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲೂ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರು, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿ, ಟೂರಿಸ್ಟ್ ವಾಹನ ಚಾಲಕ–ಮಾಲೀಕರ ಸಂಘ, ಆಟೋ ಚಾಲಕ–ಮಾಲಕರ ಸಂಘ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಾಗರಿಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯ ನಡೆಸಿದರು. ಪೇಟೆ ಪ್ರದೇಶದಲ್ಲಿ ಕಸ ಸಂಗ್ರಹಿಸುವುದರೊಂದಿಗೆ ಸಾರ್ವಜನಿಕರಿಗೆ ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಹಾಕುವಂತೆ ಜಾಗೃತಿ ಮೂಡಿಸಲಾಯಿತು.
ಒಡಿಯೂರು ಸಂಘ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಯುವಕ–ಯುವತಿ ಮಂಡಳಿಗಳು, ಶೌರ್ಯ ತಂಡ, ಶಿಕ್ಷಣ ಸಂಸ್ಥೆಗಳು, ಸಹಕಾರಿ ಸಂಘಗಳು, ಸ್ವಸಹಾಯ ಸಂಘಗಳು, ಧಾರ್ಮಿಕ ಸಂಸ್ಥೆಗಳು, ಮೆಸ್ಕಾಂ, ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂಜೀವಿನಿ ಒಕ್ಕೂಟ, ವರ್ತಕರ ಸಂಘ, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಅಭಿಯಾನದಲ್ಲಿ ಭಾಗವಹಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ ನೋಡಲ್ ಅಧಿಕಾರಿ ಜಯಲಕ್ಷ್ಮೀ ರಾಯಕೋಡ್, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಜಿಲ್ಲಾ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡ್ಕಿದು, ನವೀನ್, ಪವನ್ ಸೇರಿದಂತೆ ಹಲವರು ಇದ್ದರು.
What do you feel about this post?
Like
Love
Happy
Haha
Sad



