ಮಂಗಳೂರು: ರಾಷ್ಟ್ರೀಯ ಹೆದ್ದಾರಿ–275ರ ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರ 49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರೊಂದಿಗೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಾಣಿ–ಸಂಪಾಜೆ ರಸ್ತೆ ದಕ್ಷಿಣ ಕನ್ನಡ ಮತ್ತು ಒಳನಾಡು ಪ್ರದೇಶಗಳ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ದೀರ್ಘಕಾಲದಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರು ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಯೋಜನೆಗೆ ಅಗತ್ಯ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಸದ ಚೌಟ ಅವರು ಒತ್ತಾಯಿಸಿದ್ದಾರೆ.
ಸಂಚಾರ ಸುರಕ್ಷತೆ ಹೆಚ್ಚಿಸುವುದರ ಜೊತೆಗೆ ಕರಾವಳಿ ಮತ್ತು ಒಳನಾಡಿನ ನಡುವಿನ ಸಂಪರ್ಕ ಸುಧಾರಿಸಲು ಈ ಯೋಜನೆ ಅಗತ್ಯವಾಗಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು ಕಾರ್ಯದರ್ಶಿ ಅವರ ಗಮನಕ್ಕೆ ತಂದಿದ್ದಾರೆ.
ಈ ವೇಳೆ ಮಂಗಳೂರು–ಬೆಂಗಳೂರು ಸಂಪರ್ಕ ಸುಧಾರಣೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಯಿತು. ಮಂಗಳೂರು–ಬೆಂಗಳೂರು ವೇಗದ ಹೆದ್ದಾರಿ ಯೋಜನೆಯ ಭಾಗವಾಗಿರುವ ಶಿರಾಡಿ ಘಾಟ್ ವಿಭಾಗದ ಹೊಸ ರಸ್ತೆ ವಿನ್ಯಾಸಕ್ಕೆ ಅನುಮೋದನೆ ದೊರೆತಿರುವುದನ್ನು ಸಂಸದರು ಸ್ವಾಗತಿಸಿದರು. ಪ್ರಸ್ತುತ ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದ್ದು, ಪರಿಸರ, ಅರಣ್ಯ ಹಾಗೂ ವನ್ಯಜೀವಿ ಇಲಾಖೆಗಳ ಅನುಮತಿ ಪಡೆಯುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ ಎಂದರು.
ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಪ್ರಮುಖ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಲು ಕೇಂದ್ರ ಸಚಿವಾಲಯದೊಂದಿಗೆ ನಿರಂತರ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಿದ್ದಾರೆ.
ದುರಸ್ತಿಗೆ ವಿಶೇಷ ಅನುದಾನ
ಮಾಣಿ–ಸಂಪಾಜೆ ವಿಭಾಗದ 71.60 ಕಿ.ಮೀ. ರಸ್ತೆಯ ತುರ್ತು ದುರಸ್ತಿ ಕಾಮಗಾರಿಗೆ ₹49.22 ಕೋಟಿ ಮಂಜೂರಾಗಿದೆ. ಈ ಅನುದಾನದಲ್ಲಿ ರಸ್ತೆ ಮರುಡಾಂಬರೀಕರಣ, ರಸ್ತೆ ಬದಿಗಳ ಅಭಿವೃದ್ಧಿ, ಸಂಚಾರ ಸೂಚನಾ ಫಲಕ ಅಳವಡಿಕೆ ಹಾಗೂ ರಸ್ತೆ ಗುರುತುಗಳ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಆರ್ಥಿಕ ಹಾಗೂ ಟೆಂಡರ್ ಅನುಮೋದನೆ ದೊರೆತ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಮಾಣಿ–ಸಂಪಾಜೆ ಹೆದ್ದಾರಿಯನ್ನು ಪೇವ್ಡ್ ಶೋಲ್ಡರ್ ಒಳಗೊಂಡ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಯನ್ನು 2026–27ನೇ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ರಸ್ತೆ ವಿನ್ಯಾಸಕ್ಕೆ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆಯಿದೆ ಎಂದರು.
What do you feel about this post?
Like
Love
Happy
Haha
Sad



