ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ರಕ್ತ ವಿತರಣೆಯ ಎಲ್ಲ ಪ್ರಕ್ರಿಯೆಗಳೂ ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿವೆ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ.
ಜುಲೈ 7 ರಂದು ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ಒಂದೇ ಬಾರಿ 15 ಯುನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ಯಾವುದೇ ದಾಖಲಾತಿ ಇಲ್ಲದೆ ನೀಡಲಾಗಿದೆ ಎಂಬ ಆರೋಪಗಳು ವೈರಲ್ ಆಗಿದ್ದವು. ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿರುವ ಜಿಲ್ಲಾ ಆಸ್ಪತ್ರೆ, ಅವು ಸತ್ಯಕ್ಕೆ ದೂರವಾದ ದಾರಿ ತಪ್ಪಿಸುವ ಮಾಹಿತಿ ಎಂದು ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸರ್ಕಾರದ ಮಾರ್ಗಸೂಚಿಗಳು, ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಕಾಯ್ದೆ–1940 ಹಾಗೂ ಸಂಬಂಧಿತ ನಿಯಮಾವಳಿಗಳು ಮತ್ತು ರಕ್ತನಿಧಿಯ ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಅನುಸಾರವೇ ರಕ್ತ ಹಾಗೂ ರಕ್ತ ಘಟಕಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತಿ ಯುನಿಟ್ ರಕ್ತ ಅಥವಾ ರಕ್ತ ಘಟಕವನ್ನು ಅಗತ್ಯ ದಾಖಲೆಗಳ ಪರಿಶೀಲನೆ ಹಾಗೂ ನಿಗದಿತ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ವಿತರಿಸಲಾಗುತ್ತದೆ. ಯಾವುದೇ ದಾಖಲೆಗಳಿಲ್ಲದೆ ರಕ್ತ ವಿತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿಯಂತೆ ಬ್ಲಡ್ ಸ್ಟೋರೇಜ್ ಯುನಿಟ್ ಹೊಂದಿರುವ ಆಸ್ಪತ್ರೆಗಳಿಗೆ ಮಾತ್ರ ರಕ್ತ ಪೂರೈಕೆ ಮಾಡಲಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸುಳ್ಳು ಸುದ್ದಿ ಹರಡಿದವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಸಾರ್ವಜನಿಕರು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬುವಂತೆ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad



