ಮಂಗಳೂರು: ರಾಜ್ಯದಲ್ಲಿ ಈಚೆಗೆ ಹೆಚ್ಚುತ್ತಿರುವ ಭೂ ಕುಸಿತ ಹಾಗೂ ತಡೆಗೋಡೆ ಕುಸಿತ ಪ್ರಕರಣಗಳಿಗೆ ಹವಾಮಾನ ವೈಪರೀತ್ಯದ ಜೊತೆಗೆ ಅವೈಜ್ಞಾನಿಕ ಮತ್ತು ಅನಿಯಂತ್ರಿತ ಬೆಟ್ಟ ಕೊರೆಯುವಿಕೆಯೂ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇಂತಹ ಕಾಮಗಾರಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಒತ್ತಾಯಿಸಿದರು.
ಮೂಡುಬಿದಿರೆ ಸಮೀಪದ ಕೇಮಾರು ಮಠದ ರಸ್ತೆ ಹಾಗೂ ಗುರುಪುರ ಭಾಗದಲ್ಲಿ ಸ್ಥಳೀಯ ಪಂಚಾಯಿತಿಗಳ ಸಹಕಾರದೊಂದಿಗೆ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆಯಲಾಗುತ್ತಿದೆ ಎಂದು ಆರೋಪಿಸಿದರು. ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ನಿಯಂತ್ರಣವಿಲ್ಲದೆ ನಡೆಯುತ್ತಿರುವ ಕಾಮಗಾರಿಗಳು ಮಾನವ ಜೀವ ಹಾಗೂ ಆಸ್ತಿಪಾಸ್ತಿಗೆ ಅಪಾಯವನ್ನು ಹೆಚ್ಚಿಸುತ್ತಿವೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸಂಭವಿಸಿದ ಭೂಕುಸಿತದಲ್ಲಿ ಅಮಾಯಕರು ಮೃತಪಟ್ಟಿದ್ದರೂ, ಇದುವರೆಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ. ಕೊಡಗಿನಲ್ಲಿ ನಡೆದ ಭೂಕುಸಿತದಂತಹ ದುರಂತಗಳಿಂದಲೂ ಸರ್ಕಾರ ಯಾವುದೇ ಪಾಠ ಕಲಿತಿಲ್ಲ ಎಂದು ಟೀಕಿಸಿದರು.
ಗೋವಾ ರಾಜ್ಯದ ಮಾದರಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಅಭಿವೃದ್ಧಿ ರಹಿತ ವಲಯ ಎಂದು ಘೋಷಿಸಬೇಕು. ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬೆಟ್ಟ ಕೊರೆಯುವಿಕೆಗೆ ಕಠಿಣ ನಿಯಂತ್ರಣ ಹೇರಬೇಕು. ಅವೈಜ್ಞಾನಿಕ ಕಾಮಗಾರಿಗಳಿಂದ ಜೀವಹಾನಿಗೆ ಕಾರಣವಾಗುವ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ ಭೂಕುಸಿತ ಅಪಾಯವಿರುವ ಪ್ರದೇಶಗಳಲ್ಲಿ ತಜ್ಞರ ಸಮಿತಿಯಿಂದ ವೈಜ್ಞಾನಿಕ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಲ್. ಪಿಂಟೊ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸೀಮಾ ಮಡಿವಾಳ, ಜಿಲ್ಲಾ ಕಾರ್ಯದರ್ಶಿಗಳಾದ ಕಬೀರ್ ಕಾಟಿಪಳ್ಳ, ಹಬೀಬ್ ಖಾದರ್ ಹಾಗೂ ವಾಸುದೇವ್ ಇದ್ದರು.
What do you feel about this post?
Like
Love
Happy
Haha
Sad



