ಮಂಗಳೂರು: ಬಿ. ಸಿ.ರೋಡ್ನಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ತೀವ್ರ ಖಂಡಿಸಲಿದೆ. ಆರೋಪಿಗೆ ಜಾಮೀನು ಸಿಗದಂತೆ ಕಠಿಣ ಕಾನೂನು ಕ್ರಮ ಕೈಗೊಂಡು ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ವಿಭಾಗದ ಅಧ್ಯಕ್ಷೆ ಎಸ್. ಅಪ್ಪಿ, ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.
ಈ ಘಟನೆ ಮಹಿಳೆಯರ ಸುರಕ್ಷತೆಯ ಕುರಿತು ಸಮಾಜದಲ್ಲಿ ಭಯದ ವಾತಾವರಣವನ್ನು ಉಂಟುಮಾಡಿದೆ. ಪೋಷಕರು ಮಕ್ಕಳನ್ನು ಶಾಲೆ– ಕಾಲೇಜುಗಳಿಗೆ , ಕೆಲಸಕ್ಕೆ ಕಳಿಸದೇ ಇರುವಂತಹ ಸ್ಥಿತಿ ಇದೆ. ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಕಳೆದ ಮೂರ ವರ್ಷಗಳಿಂದ ಯಾವುದೇ ಘಟನೆ ನಡೆದಿರಲಿಲ್ಲ. ಈಗ ಇಂತಹ ಘಟನೆ ನಾಗರೀಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೇ ಎಂದು ಆರೋಪಿಸಿದರು.
ದೇಶದ ಭವಿಷ್ಯ ರೂಪಿಸಬೇಕಾದ ಯುವಕರು ಇಂತಹ ಹೇಯ ಕೃತ್ಯಗಳಲ್ಲಿ ತೊಡಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಹಿಳೆಯರ ಮೇಲಿನ ಹಿಂಸಾಚಾರ, ದೌರ್ಜನ್ಯ ಹಾಗೂ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಸಮಾಜದಲ್ಲಿ ಮಾನವೀಯ ಮೌಲ್ಯಗಳ ಕುಸಿತಕ್ಕೆ ಸಾಕ್ಷಿಯಾಗಿದೆ. ಯುವಜನತೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಹಾಗೂ ಇಂತಹ ಕೃತ್ಯಗಳ ಹಿಂದಿರುವ ಕಾರಣಗಳ ಕುರಿತು ಸಮಗ್ರ ಪರಿಶೀಲನೆ ಅಗತ್ಯವಾಗಿದೆ ಎಂದರು.
ಇಂತಹ ಘಟನೆಗಳು ಮರುಕಳಿಸದಂತೆ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಬೇಕು. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಿ, ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಅಪರಾಧ ನಡೆಯುವ ಸಂದರ್ಭ ಜನರು ಕೇವಲ ಮೊಬೈಲ್ನಲ್ಲಿ ದೃಶ್ಯ ಸೆರೆಹಿಡಿಯುವುದಕ್ಕಿಂತ, ಸಾಧ್ಯವಾದರೆ ಜೀವ ಉಳಿಸುವ ಪ್ರಯತ್ನಕ್ಕೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗುತ್ತದೆ. ಹತ್ಯೆಗೆ ಒಳಗಾಗಿರುವ ಯುವತಿಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ. ಕೃತ್ಯದ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ರಾಜ್ಯ ಹಾಗೂ ಕೇಂದ್ರ ಸರಕಾರ ಇಂತಹ ಕೃತ್ಯಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಕಾಂಗ್ರೆಸ್ ಮುಖಂಡರಾದ ವೀಣಾ ಬೆನೆಡಿಕ್ಟ್, ಗೀತಾ ಪ್ರವೀಣ್, ಕಲಾ ಜ್ಯೋತಿ, ವೃಂದಾ, ಶಾಂತಲಾ ಗಟ್ಟಿ ಹಾಗೂ ಚಂಚಲಾಕ್ಷಿ ಇದ್ದರು.
What do you feel about this post?
Like
Love
Happy
Haha
Sad







