ನೀಟ್ ಅಕ್ರಮ, ಶಿಕ್ಷಣ ಸಚಿವರ ರಾಜೀನಾಮೆಗೆ ಸಚಿವ ಖಾದರ್ ಒತ್ತಾಯ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸುವ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು.

<

ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಾವಿಗೀಡಾದ 20 ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ. ಅನ್ಯಾಯವೇ ಕಾನೂನಾದರೆ, ಪ್ರತಿಭಟನೆ ಕರ್ತವ್ಯ ಆಗುತ್ತದೆ ಎಂದರು.

ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ: ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿರುವ ಸಂದರ್ಭದಲ್ಲಿ ಅವರ ಪರವಾಗಿ ಧ್ವನಿ ಎತ್ತುವ ಪ್ರತಿಭಟನೆ ನಡೆಯುತ್ತಿದೆ. ಆದರೆ ಸಂಸತ್ತಿನಲ್ಲಿ ಈ ವಿಚಾರ ಚರ್ಚೆಗೆ ಅವಕಾಶ ನೀಡದೆ, ಹೊರಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಖಂಡನೀಯ. ಆರಂಭದಲ್ಲಿಯೇ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದು ದೇಶದ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಬೇಕು. ಇದೇ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉಂಟಾಗಿದ್ದರೆ ಬಿಜೆಪಿ ಯಾವ ನಿಲುವು ತೆಗೆದುಕೊಳ್ಳುತ್ತಿತ್ತು ಎಂಬುದನ್ನು ಈಗ ಸ್ಪಷ್ಟಪಡಿಸಬೇಕು ಎಂದು ಅವರು ಸವಾಲು ಹಾಕಿದರು.

ದೇಶದ ಭವಿಷ್ಯದ ಮೇಲಿನ ಹಲ್ಲೆ: ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಜತೆಗೆ ಸ್ಥಳೀಯರಿಂದಲೂ ಹಲ್ಲೆ ನಡೆದಿದೆ ಎಂದು ಆರೋಪಿಸಿದ ಖಾದರ್, ಇದು ಕೇವಲ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವಲ್ಲ, ದೇಶದ ಭವಿಷ್ಯದ ಮೇಲಿನ ಹಲ್ಲೆಯಾಗಿದೆ ಎಂದು ತಿಳಿಸಿದರು.

ಕೆಲವರು ಕೇಂದ್ರ ಶಿಕ್ಷಣ ಸಚಿವರು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಿದ್ದರೆ ಹಿಂದೆ ಕೆ.ಜೆ. ಜಾರ್ಜ್ ಮತ್ತು ನಾಗೇಂದ್ರ ಅವರ ರಾಜೀನಾಮೆ ಕೇಳಿದ್ದು ಏಕೆ ? ಬಿಜೆಪಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ: ನೀಟ್ ಅಕ್ರಮ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ರಾಜಕೀಯ ಉದ್ದೇಶ ಹೊಂದಿದ್ದರೆ ಪ್ರಧಾನಿಯ ರಾಜೀನಾಮೆಯನ್ನೇ ಕೇಳುತ್ತಿತ್ತು. ಆದರೆ ನಾವು ಕೇಳುತ್ತಿರುವುದು ನೇರ ಹೊಣೆಗಾರಿಕೆಯಿರುವ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಮಾತ್ರ ಎಂದರು.

ಪಂಜಾಬ್ ರೈತರ ಪ್ರತಿಭಟನೆಯಲ್ಲಿಯೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಈಗ ವಿದ್ಯಾರ್ಥಿಗಳ ಮೇಲೂ ಅದೇ ರೀತಿಯ ವರ್ತನೆ ನಡೆಯುತ್ತಿದೆ. ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವ್ಯವಸ್ಥೆಯ ಮೇಲುಸ್ತುವಾರಿ ವಹಿಸಿದವರು ನೈತಿಕ ಹೊಣೆ ಹೊರುವುದು ಅನಿವಾರ್ಯ ಎಂದು ತಿಳಿಸಿದರು.

ಪ್ರತಿಭಟನಾ ಸ್ಥಳದಲ್ಲಿ ನಕಲಿ ಪೊಲೀಸರು ಹೇಗೆ ಕಾಣಿಸಿಕೊಂಡರು? ಅಸಲಿ ಪೊಲೀಸರನ್ನು ಬದಿಗಿರಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು ದೇಶವೇ ನೋಡಿದೆ. ಪ್ರತಿಭಟನೆ ನಡೆಸಿದವರು ವಿದ್ಯಾರ್ಥಿಗಳು, ಅವರು ರೌಡಿಗಳಲ್ಲ. ಅವರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಹೊರಗಿನವರು ಇದ್ದರೆ ಕೇಂದ್ರದ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಆರೋಪಿಸಿದರು.

ಶಾಸಕ ಡಾ. ಮಂತರ್ ಗೌಡ, ಕಾಂಗ್ರೆಸ್ ಮುಖಂಡರಾದ ಮಮತಾ ಗಟ್ಟಿ, ಸದಾಶಿವ ಉಳ್ಳಾಲ್, ರಮೇಶ್ ಶೆಟ್ಟಿ, ನವಾಜ್, ಸುಹೇಲ್ ಕಂದಕ್, ಶೇಖರ್ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *