ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು.
ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ, ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಹಾಗೂ ಅಮಾನವೀಯ ವರ್ತನೆ ಸಾಮಾಜಿಕ ಜಾಲತಾಣಗಳ ಮೂಲಕ ದೇಶದ ಜನತೆ ಕಂಡಿದ್ದಾರೆ ಎಂದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಆಧಾರ ರಹಿತ ಆರೋಪ ಮಾಡುವ ಬದಲು, ಪರೀಕ್ಷಾ ವ್ಯವಸ್ಥೆಯಲ್ಲಿ ಇರುವ ಲೋಪಗಳನ್ನು ಸರಿಪಡಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ವಿದ್ಯಾರ್ಥಿಗಳ ಭದ್ರತೆ ಮತ್ತು ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಯನ್ನು ಖಚಿತಪಡಿಸುವುದು ಸರ್ಕಾರದ ಹೊಣೆಗಾರಿಕೆ ಆಗಿದೆ ಎಂದರು.
ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಜತೆಗೆ ಸಂವಾದ ನಡೆಸಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುಃಖಕರ ಬೆಳವಣಿಗೆ ಎಂದರು.
2014 ರಿಂದ ಎನ್ಟಿಎ ಮೂಲಕ ನಡೆದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳೆ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಅವರು, ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಕಾರ್ಯವೈಖರಿಯ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು. ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಪ್ರಚೋದನೆಗೆ ಒಳಗಾಗದೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ತಮ್ಮ ಭವಿಷ್ಯವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ಅಪ್ಪಿ, ಟಿ.ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಪ್ರೇಮನಾಥ್ ಹಾಗೂ ಸಮರ್ಥ ಭಟ್ ಇದ್ದರು.
ಮುಖ್ಯಾಂಶಗಳು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳೆ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ
ಕೋಚಿಂಗ್ ಸೆಂಟರ್ ಗಳ ವಿರುದ್ಧ ಯಾಕೇ ಕ್ರಮವಿಲ್ಲ
ಅಮಾನವೀಯ ಕೃತ್ಯವನ್ನು ಖಂಡಿಸುವುದು ಮಹಾಪರಾಧವೇ?
What do you feel about this post?
Like
Love
Happy
Haha
Sad







