ಮಂಗಳೂರು: ಶಕ್ತಿನಗರದಲ್ಲಿ ಇರುವ ಶಕ್ತಿ ವಿದ್ಯಾ ಸಂಸ್ಥೆಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ವನ್ನು ದೇಶಭಕ್ತಿ ಮತ್ತು ಸೈನಿಕರ ತ್ಯಾಗದ ಸ್ಮರಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ದೀಪ ಬೆಳಗಿಸಿ, ಕಾರ್ಗಿಲ್ ವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಅವರು ಮಾತನಾಡಿ, ದೇಶದ ಗಡಿಯಲ್ಲಿ ಸೈನಿಕರು ಹಗಲು-ರಾತ್ರಿ ಕಾವಲು ಕಾಯುತ್ತಿರುವುದರಿಂದ ದೇಶದೊಳಗೆ ಶಾಂತಿ ಮತ್ತು ಸುರಕ್ಷತೆ ನೆಲೆಸಿದೆ ಎಂದು ಹೇಳಿದರು.
ಕಾರ್ಗಿಲ್ ಯುದ್ಧವು ವಿಶ್ವದ ಅತ್ಯಂತ ಕಠಿಣ ಯುದ್ಧಗಳಲ್ಲಿ ಒಂದಾಗಿದ್ದು, ಸೈನಿಕರ ತ್ಯಾಗ ಮತ್ತು ದೇಶಭಕ್ತಿಯು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಬೇಕು ಎಂದರು. ದೇಶರಕ್ಷಣೆ ಕೇವಲ ಸೈನಿಕರ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬ ನಾಗರಿಕನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ದೇಶಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಶಿಸ್ತು, ಸ್ವಚ್ಛತೆ ಹಾಗೂ ರಾಷ್ಟ್ರೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವನ್ನೂ ಅವರು ಒತ್ತಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಯ್ಕ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧಿಸಿರುವ ಯಶಸ್ಸು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಅವರು ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಸಾಧನೆ ಮಾಡಿದ ಐದು ಮಂದಿ ವಿದ್ಯಾರ್ಥಿಗಳಿಗೆ ಡಾ. ಕೆ.ಸಿ. ನಾಯ್ಕ್ ಅವರು ತಲಾ 10,000 ಗೌರವಧನ ನೀಡಿ ಸನ್ಮಾನಿಸಿದರು.
ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಯಶಸ್ಸಿಗೆ ಸಂಸ್ಥೆ, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯ ಮಾರ್ಗದರ್ಶನವೇ ಕಾರಣ ಎಂದು ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಸುರೇಖಾ ಆರ್. ಭಟ್, ನಿವೃತ್ತ ಸೈನಿಕ ನರೇಶ್ ಪೈ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು.
ಶಿಕ್ಷಕ ಮಂಜುನಾಥ್ ಅತಿಥಿಗಳನ್ನು ಪರಿಚಯಿಸಿದರು. ವರ್ಚಸ್ ನಿರೂಪಿಸಿದರು. ಸಾನ್ವಿ ಶೇಖರ್ ದಿನದ ಮಹತ್ವ ತಿಳಿಸಿದರು. ಪ್ರಗತಿ ಸ್ವಾಗತಿಸಿ, ಶ್ರೀಹರಿ ವಂದಿಸಿದರು.
What do you feel about this post?
Like
Love
Happy
Haha
Sad





