ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.
ರೋಹನ್ ಕಾರ್ಪೊರೇಷನ್ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ ವರ್ಕಾಡಿ, ಅದೇ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ಪಡೆದ ಮಾಸ್ಟರ್ ಅಥೀಶ್ ಎಸ್. ಶೆಟ್ಟಿ, ಅತ್ಯುತ್ತಮ ಸಿನಿಮಾ ಕುರಿತ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಪ್ರದೀಪ್ ಕೆಂಚನೂರು ಹಾಗೂ ಅತ್ಯುತ್ತಮ ತುಳು ಚಲನಚಿತ್ರ ಪ್ರಶಸ್ತಿ ಪಡೆದ ಇಂಬು ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಮತ್ತು ನಿರ್ಮಾಪಕ ಪ್ರಶಾಂತ್ ರೈ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಪ್ರಶಸ್ತಿ ವಿಜೇತರು ರೋಹನ್ ಕಾರ್ಪೊರೇಷನ್ಗೆ ಕೃತಜ್ಞತೆ ಸಲ್ಲಿಸಿ, ತಮ್ಮ ಸಿನಿ ಮತ್ತು ಸಾಹಿತ್ಯ ಕ್ಷೇತ್ರದ ಪಯಣ, ಸಾಧನೆಯ ಹಿಂದಿನ ಪರಿಶ್ರಮ, ಸಮರ್ಪಣೆ ಹಾಗೂ ಅನುಭವಗಳನ್ನು ಹಂಚಿಕೊಂಡರು.
ಸಮಾರಂಭದಲ್ಲಿ ಮಾತನಾಡಿದ ಡಿಯೋನ್ ಮೊಂತೇರೊ, ರಾಷ್ಟ್ರೀಯ ಪ್ರಶಸ್ತಿ ವಿಜೇತರ ಸಾಧನೆ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯ, ಇಂತಹ ಪ್ರತಿಭೆಗಳನ್ನು ಗೌರವಿಸುವ ಅವಕಾಶ ರೋಹನ್ ಕಾರ್ಪೊರೇಷನ್ಗೆ ದೊರೆತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಅವರ ಸಾಧನೆ ಮುಂದಿನ ಪೀಳಿಗೆಯ ಕಲಾವಿದರು, ಚಲನಚಿತ್ರ ನಿರ್ಮಾಪಕರು ಹಾಗೂ ಕಥೆಗಾರರಿಗೆ ಸ್ಫೂರ್ತಿಯಾಗಲಿ ಎಂದರು.
ಲವಿತಾ ಡಿಸೋಜ ಕಾರ್ಯಕ್ರಮ ನಿರೂಪಣೆ ನಡೆಸಿದರು.
What do you feel about this post?
Like
Love
Happy
Haha
Sad







