ಸಿರಸಿ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಜಾಲವನ್ನು ಬನವಾಸಿ ಪೊಲೀಸರು ಭೇದಿಸಿದ್ದು, ವಾಹನ ಸಮೇತ 17 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬನವಾಸಿ ದಾಸನಕೊಪ್ಪ ಕ್ರಾಸ್ ಬಳಿ ಬನವಾಸಿ ಪೊಲೀಸ್ ಠಾಣೆ ಪಿಎಸ್ಐ ಮಹಾಂತಪ್ಪ ಕುಂಬಾರ್ ಅವರ ನೇತೃತ್ವದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.
ತಪಾಸಣೆ ವೇಳೆ ವಾಹನದಲ್ಲಿ ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂಬುದು ಪತ್ತೆ ಆಗಿದೆ. ತಕ್ಷಣವೇ ವಾಹನವನ್ನು ವಶಪಡಿಸಿಕೊಂಡು, ಅದರಲ್ಲಿದ್ದ ಅಂದಾಜು 17 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ, ವಾಹನ ಚಾಲಕ ಸಚಿನ್ ನಾಗರಾಜ ಗೌಡ ಸಿರಸಿಯ ಕೊರ್ಲಕಟ್ಟೆ ಪ್ರದೇಶದಿಂದ ಅಕ್ಕಿ ಸಾಗಣೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಪಡಿತರ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
What do you feel about this post?
Like
Love
Happy
Haha
Sad







