ಕಾರವಾರ: ಮಹಿಳೆಯರು ಸಮಾಜದಲ್ಲಿ ಧೈರ್ಯದಿಂದ ಹಾಗೂ ಆತ್ಮವಿಶ್ವಾಸದಿಂದ ಬದುಕಲು ಸ್ವಯಂ ರಕ್ಷಣೆ ತರಬೇತಿ ಅತ್ಯಗತ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ಅರಣ್ಯ ಇಲಾಖೆಯ ವನಸಿರಿ ಭವನದಲ್ಲಿ ಸರ್ಕಾರಿ ಇಲಾಖೆಗಳ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಸ್ವಯಂ ರಕ್ಷಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಎಸ್ಐಆರ್ ಪ್ರಕ್ರಿಯೆಯ ಮೂಲಕ ಪ್ರತಿಯೊಬ್ಬ ಮಹಿಳೆಯೂ ತಮ್ಮ ಮತದಾರರ ಹಕ್ಕನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳಬೇಕು. ವಿವಾಹ ಅಥವಾ ವಿಳಾಸ ಬದಲಾವಣೆಯ ನಂತರ ಅನೇಕ ಮಹಿಳೆಯರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇರುವುದರಿಂದ, ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
18 ವರ್ಷ ಪೂರ್ಣಗೊಳಿಸಿದ ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ಈಗಾಗಲೇ ಮತದಾರರಾಗಿರುವ ಮಹಿಳೆಯರು ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಯಲ್ಲಿ ಬದಲಾವಣೆಗಳಿದ್ದರೆ ತಕ್ಷಣ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ಮಹಿಳೆಯರು ಕುಟುಂಬದ ಜವಾಬ್ದಾರಿಗಳ ಜೊತೆಗೆ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ನಿತ್ಯದ ಒತ್ತಡದ ನಡುವೆಯೂ ತಮ್ಮ ಆರೋಗ್ಯ ಮತ್ತು ಆತ್ಮವಿಕಾಸಕ್ಕಾಗಿ ಸಮಯ ಮೀಸಲಿಡುವುದು ಅಗತ್ಯ. ಜಿಲ್ಲೆಯಲ್ಲಿ ಎಲ್ಲರ ಸಹಕಾರದಿಂದ ಎಸ್ಐಆರ್ ಫಾರ್ಮ್ಗಳ ಗಣಕೀಕರಣ ಕಾರ್ಯ ಶೇ 91ರಷ್ಟು ಪೂರ್ಣಗೊಂಡಿದ್ದು, ಉಳಿದ ದಾಖಲೀಕರಣ ಪ್ರಕ್ರಿಯೆಯೂ ವೇಗವಾಗಿ ಸಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಆತ್ಮರಕ್ಷಣೆ ತರಬೇತಿದಾರರು ಹಾಗೂ ವಿವಿಧ ಇಲಾಖೆಗಳ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು.
What do you feel about this post?
Like
Love
Happy
Haha
Sad





