ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ಎನ್ ಅವರನ್ನು ಮತ್ತೆ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾಗಿರುವ ಡಾ. ಅರುಣ್ ಕುಮಾರ್ ಶೆಟ್ಟಿ ಅವರು ಈ ಹಿಂದೆ ಸುಮಾರು ಒಂದೂವರೆ ವರ್ಷಗಳ ಕಾಲ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರದಲ್ಲಿ ಸೇವೆ ಸಲ್ಲಿಸಿದ್ದರು.
ಕಳೆದ ಜೂನ್ 2026ರಲ್ಲಿ ರಾಜ್ಯ ಸರ್ಕಾರವು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಶ್ರೀಕಾಂತ್ ರಾವ್ ಅವರನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ನೇಮಕ ಮಾಡಿತ್ತು. ಆದರೆ ಅವರು ಜುಲೈ ತಿಂಗಳಲ್ಲಿ ನಿವೃತ್ತರಾದ ಹಿನ್ನೆಲೆಯಲ್ಲಿ, ಆಯುಕ್ತರ ಹುದ್ದೆ ತೆರವಾಗಿದ್ದು, ಈ ಹಿನ್ನೆಲೆ ಹಿಂದೆ ಇದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿರುವ ಡಾ. ಅರುಣ್ ಕುಮಾರ್ ಶೆಟ್ಟಿ ಅವರನ್ನು ಮತ್ತೆ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಲಾಗಿದೆ.
ಡಾ. ಅರುಣ್ ಕುಮಾರ್ ಶೆಟ್ಟಿ ಅವರ ಪುನರ್ನೇಮಕದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತಾತ್ಮಕ ಕಾರ್ಯಗಳಿಗೆ ನಿರಂತರತೆ ದೊರೆಯಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
What do you feel about this post?
Like
Love
Happy
Haha
Sad





