ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಇಳಕಲ್ ಸಾಮಾನ್ಯ ಕುಟುಂಬದಿಂದ ರಾಜಕೀಯ ಬದುಕು ಆರಂಭಿಸಿ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿವರಾಜ್ ಎಸ್. ತಂಗಡಗಿ ಅವರು ಮತ್ತೊಮ್ಮೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ರಾಜಕೀಯ ಜೀವನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದೆ.
1971ರ ಜೂನ್ 10ರಂದು ಸಂಗಪ್ಪ ತಂಗಡಗಿ ಹಾಗೂ ಹುಲಿಗೆಮ್ಮ ದಂಪತಿಯ ಹಿರಿಯ ಪುತ್ರನಾಗಿ ಜನಿಸಿದ ಶಿವರಾಜ್ ತಂಗಡಗಿ ಅವರು ಇಳಕಲ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರ್ಣಗೊಳಿಸಿದರು. ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್ವಿಎಂ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ 1992 ರಲ್ಲಿ ಬಿಎಸ್ಸಿ ಪದವಿ ಪಡೆದ ಅವರು, ಬಳಿಕ ರಾಯಚೂರು ಜಿಲ್ಲೆಯ ಬಳಗಾನೂರಿನ ವಿದ್ಯಾ ಅವರನ್ನು ವಿವಾಹವಾದರು. ದಂಪತಿಗೆ ಶಶಾಂಕ್, ಕಿರಣ್ ಮತ್ತು ತನುಶ್ರೀ ಎಂಬ ಮೂವರು ಮಕ್ಕಳಿದ್ದಾರೆ.
ಕಾಲೇಜು ದಿನಗಳಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ತಂಗಡಗಿ ಅವರು ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಗುಣದಿಂದ ಜನಪ್ರಿಯತೆ ಗಳಿಸಿದ ಅವರು ಮೊದಲಿಗೆ ಇಳಕಲ್ ಪುರಸಭೆಗೆ ಅವಿರೋಧವಾಗಿ ಆಯ್ಕೆಯಾದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರಿ ಕನಕಗಿರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದರು.
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವರಾಗಿ ಕಾರ್ಯನಿರ್ವಹಿಸಿದ ಅವರು, ಬಳಿಕ ಅನರ್ಹತೆ ಪ್ರಕರಣದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಕಾಂಗ್ರೆಸ್ಗೆ ಮರಳಿದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಗಿರಿ ಕ್ಷೇತ್ರದಿಂದ ಗೆದ್ದು ಸಣ್ಣ ನೀರಾವರಿ ಸಚಿವರಾದರು.
2018ರಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ಬಲ ತುಂಬಿದ ಅವರು, 2023ರ ಚುನಾವಣೆಯಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದರು.
ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಶಿವರಾಜ್ ತಂಗಡಗಿ ಅವರ ಮೇಲೆ ಮತ್ತೊಮ್ಮೆ ಮಹತ್ವದ ಹೊಣೆಗಾರಿಕೆ ವಹಿಸಲಾಗಿದ್ದು, ರಾಜ್ಯದ ಆಡಳಿತದಲ್ಲಿ ಅವರ ಅನುಭವವನ್ನು ಸರ್ಕಾರ ಬಳಸಿಕೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.
What do you feel about this post?
Like
Love
Happy
Haha
Sad





