ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ವಾಲ್ಮೀಕಿ ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ. ವಾಂತಿ ಹಾಗೂ ಹೊಟ್ಟೆನೋವಿನ ಲಕ್ಷಣ ಕಾಣಿಸಿಕೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಅನ್ನ ಹಾಗೂ ಬಜ್ಜಿ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲರನ್ನು ತಕ್ಷಣ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇವರಲ್ಲಿ ಇಬ್ಬರ ಆರೋಗ್ಯ ಗಂಭೀರವಾಗಿದ್ದರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ಸಚಿವ ಟಿ. ರಘುಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು ಹಾಗೂ ಅಧಿಕಾರಿಗಳಿಂದ ಚಿಕಿತ್ಸೆಯ ಮಾಹಿತಿ ಪಡೆದ ಅವರು, ಯಾವುದೇ ವಿದ್ಯಾರ್ಥಿಗೆ ಚಿಕಿತ್ಸೆಯಲ್ಲಿ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಅಸ್ವಸ್ಥತೆಗೆ ನಿಖರ ಕಾರಣ ಪತ್ತೆಹಚ್ಚುವಂತೆ ನಿರ್ದೇಶನ ನೀಡಿದರು.
ತಹಶೀಲ್ದಾರ್ ರೇಹಾನ್ ಪಾಷಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಸುರೇಶ್, ಡಿಡಿಪಿಐ ಎಚ್.ಆರ್. ಮಂಜುನಾಥ್, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಪಂಕಜ್ ಹಾಗೂ ಚಂದ್ರಶೇಖರ್, ಡಿವೈಎಸ್ಪಿ ಸತ್ಯನಾರಾಯಣ ರಾವ್, ಇನ್ಸ್ಪೆಕ್ಟರ್ ಕೆ. ಕುಮಾರ್, ಪಿಎಸ್ಐ ಶಿವರಾಜ್, ಪಿಎಸ್ಐ ಈರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸಿದರು.
ವಿದ್ಯಾರ್ಥಿಗಳ ಅಸ್ವಸ್ಥತೆಗೆ ಮಧ್ಯಾಹ್ನದ ಊಟವೇ ಕಾರಣವೇ ಅಥವಾ ಬೇರೆ ಯಾವುದೇ ಅಂಶ ಕಾರಣವಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದ್ದು, ಸದ್ಯ ಹೆಚ್ಚಿನ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆದಿದೆ.
What do you feel about this post?
Like
Love
Happy
Haha
Sad





