ಕಾರವಾರ: ಬಿಜೆಪಿ ಮಹತ್ವಾಕಾಂಕ್ಷೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಅಭಿಯಾನದ ನೇತೃತ್ವವನ್ನು ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೂಪಾಲಿ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದ್ದು, ಸಮಿತಿಯ ಸಹ ಸಂಚಾಲಕರಾಗಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ ಪಾಟೀಲ್ ಕಾರ್ಯನಿರ್ವಹಿಸಲಿದ್ದಾರೆ.
ರಾಜ್ಯ ಸಂಚಾಲಕಿಯಾಗಿ ನೇಮಕಗೊಂಡ ಬಳಿಕ ರೂಪಾಲಿ ನಾಯ್ಕ ಅವರು ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ ಕಾರ್ಯಕರ್ತರನ್ನು ಸಂಘಟಿಸುವ ಕಾರ್ಯ ಆರಂಭಿಸಿದ್ದಾರೆ.
ಅಭಿಯಾನದಡಿ ಮನೆಮನೆಗೂ ರಾಷ್ಟ್ರಧ್ವಜ ತಲುಪಿಸುವುದು, ರಾಷ್ಟ್ರಧ್ವಜದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರು ಹಾಗೂ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
‘ಹರ್ ಘರ್ ತಿರಂಗಾ’ ಅಭಿಯಾನವು ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸುವುದು, ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ದೇಶಭಕ್ತಿಯ ಸಂದೇಶವನ್ನು ಜನಮಾನಸಕ್ಕೆ ತಲುಪಿಸುವ ರಾಷ್ಟ್ರೀಯ ಜನಜಾಗೃತಿ ಅಭಿಯಾನವಾಗಿ ಇದನ್ನು ರೂಪಿಸಲಾಗಿದೆ.
What do you feel about this post?
Like
Love
Happy
Haha
Sad





