ಕೊಪ್ಪಳ: ಭಾರತಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್ನ ಕೊಡುಗೆ ಅನನ್ಯ ಆಗಿದ್ದು, ಕಾಂಗ್ರೆಸ್ ಅನ್ನು ದೇಶದ್ರೋ ಹಿ ಎಂದು ಆರೋಪಿಸುವ ಬಿಜೆಪಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಎಲ್ಲಿತ್ತು. ವಿಜಯನಗರದಲ್ಲಿ ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ವಿಚಾರಕ್ಕೆ ಬಿಜೆಪಿ ನಾಯಕರು ರಾಜಕೀಯ ಬಣ್ಣ ನೀಡುತ್ತಿದ್ದಾರೆ ಎಂದರು.
ಹೊಸಪೇಟೆ ಕಾಂಗ್ರೆಸ್ನಲ್ಲಿನ ಸಣ್ಣಪುಟ್ಟ ಸ್ಥಳೀಯ ವ್ಯತ್ಯಾಸಗಳಿಂದಾಗಿ ಜಮೀರ್ ಅಹ್ಮದ್ ಅವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಅದನ್ನೇ ಬಿಜೆಪಿ ನಾಯಕರು ದೇಶದ್ರೋಹ ಎಂದು ಬಿಂಬಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿಗರು, ಇದೀಗ ಬಿಜೆಪಿ ನೇತೃತ್ವದ ಸರ್ಕಾರಗಳಿರುವ ರಾಜ್ಯಗಳಲ್ಲಿಯೂ ಇದೇ ಮಾದರಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದರು.
ಬಿಜೆಪಿ ನಾಯಕರ ನಡುವೆಯೇ ಭಿನ್ನಾಭಿಪ್ರಾಯಗಳಿವೆ. ಅಶೋಕ್ ಅವರನ್ನು ಕಂಡರೆ ಸುನೀಲ್ ಕುಮಾರ್ ಅವರಿಗೆ ಆಗುವುದಿಲ್ಲ, ಸುನೀಲ್ ಕುಮಾರ್ ಅವರನ್ನು ಕಂಡರೆ ಸಿ. ಟಿ. ರವಿ ಅವರಿಗೆ ಆಗುವುದಿಲ್ಲ. ಬಿಜೆಪಿಯವರು ಮೊದಲು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ ಎಂದರು.
ತಮಗೆ ಹಂಚಿಕೆ ಮಾಡಿರುವ ಖಾತೆಯ ಬಗ್ಗೆ ಯಾವುದೇ ಅತೃಪ್ತಿ ಇಲ್ಲ, ಸಮಾಜ ಕಲ್ಯಾಣ ಇಲಾಖೆ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೆ. ಆದರೆ ಹಿರಿಯರಾದ ಮುನಿಯಪ್ಪ ಅವರಿಗೆ ಆ ಇಲಾಖೆ ನೀಡಲಾಗಿದೆ. ಸದ್ಯ ಮುಂದುವರೆಸಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಅಡಿಯೊ ಆರೋಪಗಳ ಕುರಿತು ಪ್ರತಿಕ್ರಿಯಿಸಲ್ಲ ಎಂದರು.
ತುಂಗಭದ್ರಾ ಜಲಾಶಯದಲ್ಲಿ ಲಭ್ಯ ಇರುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆದು, ಸೆಪ್ಟೆಂಬರ್ 10ರ ಬಳಿಕ ನದಿ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಗುವುದು. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
What do you feel about this post?
Like
Love
Happy
Haha
Sad





