ತಲಪಾಡಿ: ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಪರಿಸರ ಕಾಳಜಿಯ ಸಂದೇಶದೊಂದಿಗೆ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಧ್ವಜಾರೋಹಣ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು.
ಎನ್ಡಿಎ ಮತ್ತು ಎನ್ಸಿಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೌರವ ರಕ್ಷೆ ಸ್ವೀಕರಿಸಿದ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಗಟ್ಟಿ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯಲ್ಲಿ ಜಗತ್ತಿನ ಪ್ರಮುಖ ರಾಷ್ಟ್ರವಾಗಿತ್ತು. ಬ್ರಿಟಿಷರ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸಲು ಜನರು ಮಾಡಿದ ತ್ಯಾಗ ಮತ್ತು ಬಲಿದಾನಗಳು ಸ್ಮರಣೀಯ. ಪ್ರತಿದಿನವೂ ನಮ್ಮಲ್ಲಿ ಸ್ವಾತಂತ್ರ್ಯೋತ್ಸವದ ಉತ್ಸಾಹ ಜಾಗೃತವಾಗಿರಬೇಕು. ಭವ್ಯ ಭಾರತದ ನಿರ್ಮಾಣ ನಮ್ಮೆಲ್ಲರ ಸಂಕಲ್ಪವಾಗಬೇಕು ಎಂದರು.
ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ರಾಷ್ಟ್ರಧ್ವಜವು ಭಾರತದ ಸಾರ್ವಭೌಮತ್ವದ ಸಂಕೇತವಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಅದರ ಬಗ್ಗೆ ಅಭಿಮಾನ ಮತ್ತು ಗೌರವ ಬೆಳೆಸಿಕೊಳ್ಳಬೇಕು. ರಾಷ್ಟ್ರಧ್ವಜದ ಗೌರವವನ್ನು ಸದಾ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅತಿಥಿ ಅಶೋಕ್ ಬಡೂರ್ ಅವರು ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ ಕಲಿಯುವ ಸದ್ಗುಣಗಳು ಶಾಲೆಗೆ ಮಾತ್ರ ಸೀಮಿತವಾಗದೆ, ಹೊರಜಗತ್ತಿನೊಂದಿಗೆ ವ್ಯವಹರಿಸುವಾಗಲೂ ಜೀವನದ ಭಾಗವಾಗಬೇಕು. ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವನ್ನು ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು.
ಖ್ಯಾತ ಪರಿಸರವಾದಿ ಚಂದ್ರಹಾಸ್ ಪಿ. ದೇಶಭಕ್ತಿಯ ಜತೆಗೆ ಪರಿಸರದ ಮೇಲಿನ ಕಾಳಜಿಯೂ ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸುಷ್ಮಾ ದಿನಕರ್, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಮೀನಾ ಪಣಿಕ್ಕರ್, ವ್ಯವಸ್ಥಾಪಕ ಪ್ರಫುಲ್, ದೈನಿಕ ಶಾಲೆಯ ಮುಖ್ಯಶಿಕ್ಷಕಿ ಶ್ಯಾಮಲಾ ಮಟ್ಟ, ವಿವಿಧ ವಿಭಾಗಗಳ ಉಪಪ್ರಾಂಶುಪಾಲರು, ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಇದ್ದರು.
ಶಾರದಾ ಪದವಿ, ಪದವಿಪೂರ್ವ ಹಾಗೂ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಇಡೀ ಸಭಾಂಗಣ ದೇಶಪ್ರೇಮದ ವಾತಾವರಣದಲ್ಲಿ ಮಿಂದೆದ್ದಿತು. ಶಿಕ್ಷಕಿ ರಶ್ಮಿ ಸ್ವಾಗತಿಸಿದರು. ಸಮಾಜ ಶಿಕ್ಷಕಿ ರಿತಿಕಾ ವಂದಿಸಿದರು. ಶಿಕ್ಷಕಿ ಸೌಮ್ಯ ಡಿ. ನಿರೂಪಿಸಿದರು.
What do you feel about this post?
Like
Love
Happy
Haha
Sad





