ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೊಳಗಾದವರ ವಿರುದ್ಧವೇ ಗಂಭೀರ ಪ್ರಕರಣ ದಾಖಲಿಸಿರುವುದು ಖಂಡನೀಯ. ಹಲ್ಲೆ ಮಾಡಿದವರ ವಿರುದ್ಧವೂ ಕೂಡಲೇ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.
ಪುತ್ತೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇಂತಹ ಘಟನೆಗಳನ್ನು ಕಾನೂನು ಮತ್ತು ಪೊಲೀಸ್ ಇಲಾಖೆಯ ಮೂಲಕ ಬಗೆಹರಿಸಬಹುದಿತ್ತು. ಆದರೆ ಏಕಾಏಕಿ ಅಂಗಡಿಗೆ ನುಗ್ಗಿ ದಾಳಿ ನಡೆಸಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ಇಂತಹ ‘ತಾಲಿಬಾನ್ ಸಂಸ್ಕೃತಿ’ಯ ಹೋರಾಟಗಳು ಹೆಚ್ಚಾಗುತ್ತಿವೆ. ಹೊರಗಿನಿಂದ ಬಂದು ಗಲಭೆ ಸೃಷ್ಟಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಎಂಬುದು ಪ್ರಶ್ನೆಯಾಗಿದೆ. ಪೊಲೀಸ್ ಇಲಾಖೆಯ ಮೇಲೆ ಯಾರಾದರೂ ಒತ್ತಡ ಹೇರಿದ್ದಾರೆಯೇ ಎಂಬುದೂ ಸ್ಪಷ್ಟವಾಗಬೇಕು ಎಂದು ಆಗ್ರಹಿಸಿದರು.
ಹಲ್ಲೆಗೊಳಗಾದವರ ವಿರುದ್ಧ 307ರಂತಹ ಗಂಭೀರ ಪ್ರಕರಣ ದಾಖಲಿಸಿ, ಹಲ್ಲೆ ಮಾಡಿದವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದಿರುವುದು ಯಾವ ರೀತಿಯ ಕಾನೂನು ಎಂದು ಪ್ರಶ್ನಿಸಿದ ಅವರು, ಇದು ಒಂದು ಮತ ಅಥವಾ ಧರ್ಮವನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸಿದಂತಾಗಿದೆ ಎಂದು ಆರೋಪಿಸಿದರು.
ಗೃಹ ಸಚಿವರ ಮೌನಕ್ಕೆ ಪ್ರಶ್ನೆ
ಪುತ್ತೂರು ಶಾಸಕ ಹಾಗೂ ಗೃಹ ಸಚಿವರು ಈ ಘಟನೆ ಕುರಿತು ಮೌನ ವಹಿಸಿರುವುದು ಏಕೆ ಎಂದು ನಳಿನ್ ಪ್ರಶ್ನಿಸಿದರು. ಗೃಹ ಸಚಿವರಿಗೆ ಆರ್ಎಸ್ಎಸ್ ಬಗ್ಗೆ ಮಾತನಾಡುವ ಧೈರ್ಯವಿದೆ. ಆದರೆ ಇಂತಹ ಮತೀಯವಾದ ಹಾಗೂ ‘ತಾಲಿಬಾನ್ ಸಂಸ್ಕೃತಿ’ ವಿರುದ್ಧ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಈ ವಿಚಾರದಲ್ಲಿ ಏನು ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಕೂಡಲೇ ಹಲ್ಲೆ ಮಾಡಿದವರ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಬಿಜೆಪಿ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆದರೂ ಅದಕ್ಕೆ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದರು.
What do you feel about this post?
Like
Love
Happy
Haha
Sad





