ಮಂಗಳೂರು: ರಾಜ್ಯದ 320 ಕಿಲೋ ಮೀಟರ್ ಉದ್ದದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲು ಸರ್ಕಾರ ಮುಂದಾಗಿದೆ. ಸೀ ಪ್ಲೇನ್, ಹೆಲಿ ಟ್ಯಾಕ್ಸಿ, ಜಾಯ್ ರೈಡ್ ಹಾಗೂ ರಿವರ್ ಕ್ರೂಸ್ ಸೇರಿದಂತೆ ಹಲವು ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜಿಸುವ ಮೂಲಕ ಕರಾವಳಿ ಕರ್ನಾಟಕವನ್ನು ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು, ಗಮನ ಸೆಳೆಯುವ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ತಿಳಿಸಿದ್ದಾರೆ.
2026–27ನೇ ಸಾಲಿನ ಆಯವ್ಯಯದಲ್ಲಿ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ‘ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ’ ರೂಪಿಸುವುದಾಗಿ ಘೋಷಿಸಲಾಗಿದೆ ಎಂದು ಕೂಡ ತಿಳಿಸಿದ್ದಾರೆ ಎಂದರು.
ಪ್ರವಾಸೋದ್ಯಮ ಇಲಾಖೆಯು ವಾಯುಯಾನ ಮತ್ತು ಜಲಸಾಹಸ ಪ್ರವಾಸೋದ್ಯಮ ಕ್ಷೇತ್ರದ ಪಾಲುದಾರರ ಸಹಯೋಗದಲ್ಲಿ ಕರಾವಳಿ ಪ್ರದೇಶದ ಪ್ರಮುಖ ತಾಣಗಳಿಗೆ ಸೀ ಪ್ಲೇನ್ ಹಾಗೂ ಹೆಲಿ ಟ್ಯಾಕ್ಸಿ ಮೂಲಕ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿದೆ. ಜತೆಗೆ ಜಾಯ್ ರೈಡ್ ಮತ್ತು ರಿವರ್ ಕ್ರೂಸ್ ಚಟುವಟಿಕೆಗಳಿಗೂ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ ಎಂದಿದ್ದಾರೆ ಎಂದರು.
ಈ ಯೋಜನೆಗೆ ಮೇ 27, 2026 ರಂದು ತಾತ್ವಿಕ ಅನುಮೋದನೆ ನೀಡಲಾಗಿದೆ. ಆರ್ಥಿಕ ಇಲಾಖೆಯ ಅನುಮೋದನೆಯಂತೆ ಸಾರ್ವಜನಿಕ–ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದರು.
320 ಕಿಲೋ ಮೀಟರ್ ಕರಾವಳಿಗೆ ಆದ್ಯತೆ
ಕರ್ನಾಟಕ ಪ್ರವಾಸೋದ್ಯಮ ನೀತಿ 2024–29 ರ ಅವಧಿಯಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಕರಾವಳಿ ಕರ್ನಾಟಕವನ್ನು ವಿಶ್ವದರ್ಜೆಯ ಸೌಲಭ್ಯಗಳನ್ನು ಹೊಂದಿರುವ, ಜವಾಬ್ದಾರಿಯುತ ಹಾಗೂ ಸುಸ್ಥಿರ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.
ಕರಾವಳಿ ಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ‘ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ’ ಜಾರಿಗೆ ತರಲಾಗಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಂಪೂರ್ಣ ಪ್ರದೇಶವನ್ನು ಇದರ ವ್ಯಾಪ್ತಿಗೆ ತರಲಾಗಿದೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ; ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲ್ಲೂಕುಗಳನ್ನೂ ನೀತಿಯ ವ್ಯಾಪ್ತಿಗೆ ಸೇರಿಸಲಾಗಿದೆ ಎಂದರು.
ಕಡಲತೀರಗಳ ಅಭಿವೃದ್ಧಿ
2025–26ನೇ ಸಾಲಿನ ಆಯವ್ಯಯದಲ್ಲಿಯೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕಡಲತೀರಗಳ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಜಲಸಾರಿಗೆ ಹಾಗೂ ಕಡಲತೀರ ಪ್ರವಾಸೋದ್ಯಮಕ್ಕೆ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳುವುದಾಗಿ ಘೋಷಿಸಲಾಗಿತ್ತು ಎಂದರು.
ಇದರ ಮುಂದುವರಿದ ಭಾಗವಾಗಿ ಕರಾವಳಿ ಕರ್ನಾಟಕದಲ್ಲಿ ಸುಸ್ಥಿರ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಕಾರ್ಯಕ್ರಮ ನಿರ್ವಹಣಾ ಘಟಕವನ್ನು ರಚಿಸಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಹಿವಾಟು ಸಲಹೆಗಾರರಾಗಿ ಅರ್ನ್ಸ್ಟ್ ಅಂಡ್ ಯಂಗ್ ಎಲ್ಎಲ್ಪಿ ಸಂಸ್ಥೆಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರ್ವಜನಿಕ–ಖಾಸಗಿ ಸಹಭಾಗಿತ್ವದ ಮೂಲಕ ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಉಡುಪಿ ಜಿಲ್ಲೆಯ ತ್ರಾಸಿ–ಮರವಂತೆ, ಕೋಡಿ, ಕುಂದಾಪುರ ಹಾಗೂ ಬಾರ್ಕೂರು–ಕೋಟಿ ಪ್ರದೇಶಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೊಡಿಕಲ್ ಹಾಗೂ ತಣ್ಣೀರುಬಾವಿ ಕಡಲತೀರಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿರುವ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಹಾಗೂ ಹೊಸ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಮೂಲಕ ಈ ಭಾಗವನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸಲು ಸರ್ಕಾರ ಉದ್ದೇಶಿಸಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ಐವನ್ ಡಿಸೋಜ ಅವರು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad





