ಮಂಗಳೂರು: ಸೂಟರ್ಪೇಟೆ ನಿವಾಸಿ ಹಾಗೂ ನಾಡಿನ ಹೆಸರಾಂತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರು ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಬೆಳ್ಳಿ ಹಬ್ಬದ ಅಂಗವಾಗಿ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕನ್ನಡ ನಾಡಿಗೆ ಅವರು ಸಲ್ಲಿಸಿರುವ ಸುದೀರ್ಘ ಕ್ರೀಡಾ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಕಳೆದ 32 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅಂಚನ್ ಅವರು ಜಿಲ್ಲೆ, ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ದಿನಪತ್ರಿಕೆ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳಲ್ಲಿ 4,500ಕ್ಕೂ ಹೆಚ್ಚು ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆದಿದ್ದಾರೆ. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಸಾಧನೆ ಮತ್ತು ವಿದ್ಯಮಾನಗಳ ಕುರಿತು ವಿಮರ್ಶಾತ್ಮಕ ಹಾಗೂ ವಿಶ್ಲೇಷಣಾತ್ಮಕ ಬರಹಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಕ್ರೀಡಾ ಬರಹಗಳ ಜತೆಗೆ ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಅವರು ಇತ್ತೀಚೆಗೆ ‘ತ್ಯಾಗಮಯಿ ಮೋಹಳ್ಳಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿದ್ದರು. ಸುದೀರ್ಘ ಕ್ರೀಡಾ ಪತ್ರಿಕೋದ್ಯಮ ಸೇವೆಗಾಗಿ ಈಗಾಗಲೇ ಹಲವು ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು ಅವರಿಗೆ ಸಂದಿವೆ.
ಆ.29 ರಂದು ಪ್ರಶಸ್ತಿ ಪ್ರದಾನ
ಬೆಂಗಳೂರಿನ ಜೆಎಸ್ಎಸ್ ಸಭಾಂಗಣದಲ್ಲಿ ಆ.29ರಂದು ನಡೆಯಲಿರುವ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದಲ್ಲಿ ಜಗದೀಶ್ಚಂದ್ರ ಅಂಚನ್ ಅವರಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಕಾರ್ಯದರ್ಶಿ ಎಲ್. ಸೋಮಶೇಖರ್ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad





