ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್ಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಮಾಸ್ಟರ್ ಪ್ಲಾನ್ಗೆ ಸಂಬಂಧಿಸಿದ ಸಣ್ಣಪುಟ್ಟ ತೊಡಕುಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಶೀಘ್ರವೇ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಮೂಡಾ ಕೇವಲ ನಿವೇಶನಗಳ ಹಂಚಿಕೆಗೆ ಸೀಮಿತವಾಗಬಾರದು. ಬದಲಾಗಿ ಮಂಗಳೂರು ನಗರದ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ನಗರದ ವಿಸ್ತರಣೆ ಮತ್ತು ಯೋಜಿತ ಅಭಿವೃದ್ಧಿಗೆ ಆದ್ಯತೆ ನೀಡುವುದರೊಂದಿಗೆ, ಸುರತ್ಕಲ್ ಹಾಗೂ ಬಿ.ಸಿ.ರೋಡ್ ಭಾಗಗಳ ಅಭಿವೃದ್ಧಿಗೂ ವಿಶೇಷ ಗಮನ ಹರಿಸಲಾಗುವುದು ಎಂದರು.
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಯೋಜನೆ
ಮಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಫ್ಲೈಓವರ್, ಅಂಡರ್ಪಾಸ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ನಗರದ ರಸ್ತೆ ವ್ಯವಸ್ಥೆ ಹಾಗೂ ಇತರ ಮೂಲಸೌಕರ್ಯಗಳನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮೂಡದ ವತಿಯಿಂದ ಯೋಜಿತ ಕ್ರಮಗಳನ್ನು ಕೈಗೊಳ್ಳುವ ಉದ್ದೇಶವಿದೆ ಎಂದರು.
ಕೆರೆ, ಪಾರ್ಕ್ ಅಭಿವೃದ್ಧಿಗೂ ಒತ್ತು
ನಗರದ ಪರಿಸರ ಹಾಗೂ ಸಾರ್ವಜನಿಕರ ಮನರಂಜನೆಗೆ ಪೂರಕವಾಗಿ ಕೆರೆಗಳ ಅಭಿವೃದ್ಧಿ ಮತ್ತು ಹೊಸ ಪಾರ್ಕ್ಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು ಎಂದರು.
ಅಗತ್ಯವಿದ್ದಲ್ಲಿ ಖಾಸಗಿ ಜಾಗಗಳನ್ನು ಪಡೆದು ನಗರದ ವಿವಿಧ ಭಾಗಗಳಲ್ಲಿ ಸಣ್ಣ ಪ್ರಮಾಣದ ಪಾರ್ಕ್ಗಳನ್ನು ಅಭಿವೃದ್ಧಿಪಡಿಸುವ ಯೋಜನೆಯೂ ಇದೆ ಎಂದರು.
ಒಟ್ಟಾರೆಯಾಗಿ, ಮೂಡವನ್ನು ಕೇವಲ ನಿವೇಶನ ಹಂಚಿಕೆ ಸಂಸ್ಥೆಯಾಗಿ ಸೀಮಿತಗೊಳಿಸದೆ, ಮಂಗಳೂರು ನಗರದ ಭವಿಷ್ಯದ ಯೋಜಿತ ಅಭಿವೃದ್ಧಿಗೆ ಪ್ರಮುಖ ಸಂಸ್ಥೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದರು.
ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಇದ್ದರು.
What do you feel about this post?
Like
Love
Happy
Haha
Sad





