ಮೂಡುಬಿದಿರೆ: ಕರಾವಳಿ ಭಾಗದಾದ್ಯಂತ ಸೇವಾ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶ ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘವು ಮೂಡುಬಿದಿರೆಯಲ್ಲಿ ತನ್ನ 7ನೇ ಶಾಖೆಯನ್ನು ಆರಂಭಿಸಿದೆ. ಸರ್ಕಾರಿ ಆಸ್ಪತ್ರೆ ಬಳಿಯ ಪ್ರಭು ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಶ್ರೀ ಲಕ್ಷ್ಮಣಾನಂದ ಸ್ವಾಮೀಜಿ ಮೂಲತಃ ವೈದ್ಯರಾಗಿದ್ದು, ಸಮಾಜ ನಿರ್ಮಾಣದ ದೃಷ್ಟಿಯಿಂದ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು. ರಾಮಕ್ಷತ್ರೀಯ ಸಮುದಾಯಕ್ಕೆ ಸಹಕಾರ ನೀಡುವ ಉದ್ದೇಶದಿಂದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ ಎಂದರು.
ಮೂಡುಬಿದಿರೆ ಹಲವು ಸಂಸ್ಥೆಗಳಿಗೆ ಆಶ್ರಯ ನೀಡಿರುವ ಪ್ರದೇಶವಾಗಿದ್ದು, ಸಹಕಾರಿ ಸಂಸ್ಥೆಯ ಬೆಳವಣಿಗೆಗೂ ಸ್ಥಳೀಯರು ಉತ್ತಮ ಸಹಕಾರ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 1997ರಲ್ಲಿ ಆರಂಭಗೊಂಡ ಸಂಸ್ಥೆ ಇಂದು 500ಕ್ಕೂ ಅಧಿಕ ಠೇವಣಿದಾರರನ್ನು ಹೊಂದಿರುವುದು ಗಮನಾರ್ಹ ಬೆಳವಣಿಗೆ. ಮೂಡುಬಿದಿರೆ ಶಾಖೆಯೂ ಉತ್ತಮವಾಗಿ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದ ಅವರು, ಸಂಘದ ಬೆಳವಣಿಗೆಯಲ್ಲಿ ಅಧ್ಯಕ್ಷ ಕೃಷ್ಣ ಜೆ. ಪಾಲೇಮಾರ್ ಅವರ ಪಾತ್ರವನ್ನು ಶ್ಲಾಘಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮೂಡುಬಿದಿರೆಯಲ್ಲಿ ಈಗಾಗಲೇ ಹಲವು ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆ ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಕೃಷ್ಣ ಜೆ. ಪಾಲೇಮಾರ್ ಅವರ ಕೊಡುಗೆ ಮಹತ್ವದ್ದಾಗಿದೆ. ಅವರ ಅವಧಿಯಲ್ಲಿ ಮರವೂರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ವೆಂಟೆಡ್ ಡ್ಯಾಂ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದರು.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಮಾತನಾಡಿ, ಮೂಡುಬಿದಿರೆಯ ಜನರ ಮೇಲಿನ ವಿಶ್ವಾಸದಿಂದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ ಇಲ್ಲಿ ಶಾಖೆ ಆರಂಭಿಸಿರುವುದು ಸಂತಸದ ಸಂಗತಿ. ಶಾಖೆಯ ಅಭಿವೃದ್ಧಿಗೆ ಸಾರ್ವಜನಿಕರು ಹಾಗೂ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಮಂಗಳೂರು ನಗರದ ಅಭಿವೃದ್ಧಿಯಲ್ಲೂ ಕೃಷ್ಣ ಜೆ. ಪಾಲೇಮಾರ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.
ಸಂಘದ ಅಧ್ಯಕ್ಷ ಕೃಷ್ಣ ಜೆ. ಪಾಲೇಮಾರ್ ಮಾತನಾಡಿ, ಮೂಡುಬಿದಿರೆಯಲ್ಲಿ ಶಾಖೆ ತೆರೆಯಬೇಕು ಎಂಬುದು ಹಲವು ವರ್ಷಗಳ ಕನಸಾಗಿತ್ತು. ಇದೀಗ ಅದು ನನಸಾಗಿದೆ. ಕರಾವಳಿಯಾದ್ಯಂತ ಸಂಘದ ಶಾಖೆಗಳನ್ನು ವಿಸ್ತರಿಸುವ ಉದ್ದೇಶವಿದ್ದು, ಎಸ್ಎಲ್ವಿ ಶಾಖೆಗಳು ಎಲ್ಲೆಡೆ ಇರಬೇಕು ಎಂಬ ಆಶಯ ಹೊಂದಲಾಗಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಸಮಾಜ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ನೂತನ ಶಾಖೆ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಮಾಲೀಕ ಹುಸೇನ್ ಶೇಖ್ ಅವರನ್ನು ಗೌರವಿಸಲಾಯಿತು. ಮೂಡುಬಿದಿರೆ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ.ಎಸ್., ಉದ್ಯಮಿ ಶ್ರೀಪತಿ ಭಟ್, ಬಿಜೆಪಿ ಮುಖಂಡ ಸುದರ್ಶನ, ವಕೀಲ ಬಾಹುಬಲಿ ಪ್ರಸಾದ್, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದನ್ ಕೋಟೆಕಾರ್ ಹಾಗೂ ಶಾಖಾ ವ್ಯವಸ್ಥಾಪಕಿ ಚಂದ್ರಿಕಾ ಇದ್ದರು.
ರಚಿತ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
What do you feel about this post?
Like
Love
Happy
Haha
Sad





