ಹೆಬ್ರಿ: ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಹೆಬ್ರಿಯಲ್ಲಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಭೆಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಹೆಬ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಅಪರಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಕಸ್ತೂರಿರಂಗನ್ ವರದಿಯ ಸಾಧಕ–ಬಾಧಕಗಳ ಕುರಿತು ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ.
ಕುಂದಾಪುರ, ಕಾರ್ಕಳ, ಹೆಬ್ರಿ ಹಾಗೂ ಬೈಂದೂರು ತಾಲ್ಲೂಕುಗಳ ವ್ಯಾಪ್ತಿಯ 35 ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಸ್ತೂರಿರಂಗನ್ ವರದಿಯಿಂದ ಉಂಟಾಗಬಹುದಾದ ಪರಿಣಾಮಗಳು, ಸ್ಥಳೀಯ ಜನರ ಆತಂಕಗಳು ಹಾಗೂ ಗ್ರಾಮಗಳ ವಾಸ್ತವ ಪರಿಸ್ಥಿತಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಉದಯ್ಕುಮಾರ್ ಶೆಟ್ಟಿ ಮುನಿಯಾಲು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ ಇದ್ದರು.
What do you feel about this post?
Like
Love
Happy
Haha
Sad





