ಸಂಪುಟ ಸಭೆಗೆ ಮಂಗಳೂರು ಸಿಂಗಾರ: ನಗರದೆಲ್ಲೆಡೆ ಸ್ವಾಗತದ ಕಳೆ, ಬ್ಯಾನರ್ ಗಳ ಅಬ್ಬರ

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ

Spread the love

ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳು, ಅಭಿವೃದ್ಧಿಯ ಪ್ರಸ್ತಾವಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜಾಗಿದೆ. ಸೆ.18ರಂದು ಪಡೀಲ್‌ನ ಜಿಲ್ಲಾ ಕಚೇರಿಗಳ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಸಭೆಯತ್ತ ಕರಾವಳಿಯ ಮೂರು ಜಿಲ್ಲೆಗಳ ಜನರ ಗಮನ ನೆಟ್ಟಿದೆ.

<

ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ, ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳು, ಕೈಗಾರಿಕಾ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಸರ್ಕಾರದ ಮುಂದಿವೆ. ಮೂರು ಕರಾವಳಿ ಜಿಲ್ಲೆಗಳ ವಿವಿಧ ಇಲಾಖೆಗಳ ವತಿಯಿಂದ ಹಲವು ಪ್ರಸ್ತಾವಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಸಂಪುಟದ 31 ಸಚಿವರೂ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ, ಪಶುಸಂಗೋಪನಾ ಸಚಿವ ಪುಟ್ಟರಂಗ ಶೆಟ್ಟಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಸೇರಿದಂತೆ ಹಲವು ಸಚಿವರು ಈಗಾಗಲೇ ನಗರಕ್ಕೆ ಬಂದಿದ್ದಾರೆ. ಉಳಿದ ಸಚಿವರು ಶುಕ್ರವಾರ ಬೆಳಿಗ್ಗೆ ಆಗಮಿಸಲಿದ್ದಾರೆ.

ಸಚಿವರು, ಅವರ ಕಚೇರಿ ಸಿಬ್ಬಂದಿ, ಸರ್ಕಾರದ ಉನ್ನತ ಅಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಗಣ್ಯರ ವಾಸ್ತವ್ಯಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ನಗರದ ಆರು ಹೋಟೆಲ್‌ಗಳಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಸಭೆ ನಡೆಯುತ್ತಿರುವುದರಿಂದ ವಿಶೇಷ ಸಭಾಂಗಣ ಸಿದ್ಧಪಡಿಸಲಾಗಿದೆ. ಸಭೆಯ ಸಿದ್ಧತೆಗಳನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ.

ರಸ್ತೆ ದುರಸ್ತಿ, ನಗರ ಸೌಂದರ್ಯೀಕರಣ

ಸಚಿವ ಸಂಪುಟದ ಬಹುತೇಕ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯೂ ನಗರದ ಸೌಂದರ್ಯೀಕರಣ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ವೇಗ ನೀಡಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿ ನಡೆಯುತ್ತಿದ್ದು, ರಸ್ತೆ ವಿಭಜಕಗಳಲ್ಲಿರುವ ಉದ್ಯಾನಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಸಾಮಾನ್ಯವಾಗಿ ಮಳೆಗಾಲದ ಬಳಿಕ ಕೈಗೊಳ್ಳುವ ನಗರ ಸೌಂದರ್ಯೀಕರಣ ಕಾಮಗಾರಿಯನ್ನು ಈ ಬಾರಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಂಚಿತವಾಗಿ ಆರಂಭಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಸ್ವಾಗತ ಬ್ಯಾನರ್‌ಗಳು ಹಾಗೂ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಸ್ವಾಗತಿಸಲು ವಿವಿಧೆಡೆ ಸಿದ್ಧತೆ ಮಾಡಲಾಗಿದೆ.

ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಯ ಮೇಲೂ ವಿಶೇಷ ಗಮನ ಹರಿಸಲಾಗಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *