ಮಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ ಅವರನ್ನು ‘ದೇಶಭಕ್ತ’ ಎಂದು ಬಣ್ಣಿಸಿರುವುದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬದ್ಧ ಆರೋಪಗಳನ್ನು ಎದುರಿಸುತ್ತಿರುವ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರುವ ವ್ಯಕ್ತಿಯನ್ನು ‘ದೇಶಭಕ್ತ’ ಎಂದು ಕರೆಯುವುದು ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ದೇಶದ ಏಕತೆ ಮತ್ತು ಸಮಗ್ರತೆಯನ್ನು ಪ್ರಶ್ನಿಸುವವರ ಪರ ನಿಲ್ಲುವ ಮೂಲಕ ಕಾಂಗ್ರೆಸ್ ತನ್ನ ನಿಲುವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಯುವಜನರಲ್ಲಿ ದೇಶಭಕ್ತಿ ಮೂಡಿಸುವ ಸಂಘಟನೆಗಳನ್ನು ಟೀಕಿಸುವ ಬದಲು, ದೇಶದ್ರೋಹದ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯ ಪರ ವಾದಿಸುವುದು ಕಾಂಗ್ರೆಸ್ನ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಎಬಿವಿಪಿ ಕಾರ್ಯಕರ್ತರು ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಟೀಕಿಸಿರುವ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಖಂಡನೀಯ. ದೇಶಭಕ್ತ ಯುವಶಕ್ತಿಯನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿರುವ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದರು.
ದೇಶದ ಸಾರ್ವಭೌಮತೆ, ಏಕತೆ ಹಾಗೂ ಸಮಗ್ರತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಉಮರ್ ಖಾಲಿದ್ ಅವರನ್ನು ದೇಶಭಕ್ತ ಎಂದು ಕರೆಯುವ ಮೂಲಕ ಕಾಂಗ್ರೆಸ್ ಯಾವ ಸಂದೇಶ ನೀಡಲು ಬಯಸುತ್ತಿದೆ ಎಂಬುದನ್ನು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ. ಇಂತಹ ರಾಜಕೀಯ ನಿಲುವುಗಳಿಗೆ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad





