ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಸಂಚಾರಿ ಪೀಠ ಸ್ಥಾಪನೆ ಕುರಿತಾಗಿ ಇದುವರೆಗೆ ನಡೆದ ಬೆಳವಣಿಗೆಗಳು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ನಡೆದ ಚರ್ಚೆಗಳು, ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲಾದ ಕ್ರಮಗಳು ಹಾಗೂ ಮುಂದಿನ ಹಂತದ ಕಾರ್ಯತಂತ್ರಗಳ ಕುರಿತು ಈ ವೇಳೆ ವಿವರವಾದ ಚರ್ಚೆ ನಡೆಯಿತು.
ಮುಖ್ಯ ನ್ಯಾಯಮೂರ್ತಿಗಳು ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಯಿತು. ಅಕ್ಟೋಬರ್ ಒಳಗೆ ಸಂಚಾರ ಪೀಠ ಆರಂಭಿಸಲು ಅನುಕೂಲವಾಗುವಂತೆ ಸರ್ಕಾರ ಮತ್ತು ಹೈಕೋರ್ಟ್ ಆಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.
ಸಂಚಾರ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಮ್ಮತಿ ಸೂಚಿಸಿರುವುದು ಮಹತ್ವದ ಬೆಳವಣಿಗೆ ಎಂದು ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರಿಗೆ ತಿಳಿಸಲಾಯಿತು.
ಮುಂದಿನ ಹಂತದಲ್ಲಿ ಯಾವ ಜಿಲ್ಲೆಗಳು ಸಂಚಾರ ಪೀಠದ ವ್ಯಾಪ್ತಿಗೆ ಒಳಪಡುವುದು ಹಾಗೂ ಅಗತ್ಯ ಆಡಳಿತಾತ್ಮಕ ಕ್ರಮಗಳ ಕುರಿತು ಹೈಕೋರ್ಟ್ ತೀರ್ಮಾನ ಕೈಗೊಳ್ಳಬೇಕಿದೆ ಎಂಬ ವಿಷಯವೂ ಚರ್ಚೆಗೆ ಬಂದಿತು.
ಇದೇ ವೇಳೆ ಹೈಕೋರ್ಟ್ನಲ್ಲಿ ನ್ಯಾಯಾಧೀಶರ ಕೊರತೆ ಇರುವ ವಿಚಾರವನ್ನು ಕೂಡ ನಿವೃತ್ತ ನ್ಯಾ. ಅಬ್ದುಲ್ ನಜೀರ್ ಅವರ ಗಮನಕ್ಕೆ ತರಲಾಯಿತು. ಈ ಕುರಿತು ಅಗತ್ಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.
ಸಂಚಾರಿ ಪೀಠ ಸ್ಥಾಪನೆಯಿಂದ ಕರಾವಳಿ ಭಾಗದ ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕ ವಲಯದಿಂದ ಹೋರಾಟಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವ ವಿಚಾರವನ್ನೂ ನ್ಯಾಯಮೂರ್ತಿಗಳ ಗಮನಕ್ಕೆ ತರಲಾಯಿತು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಬ್ದುಲ್ ನಜೀರ್, ಮುಂದಿನ ದಿನಗಳಲ್ಲಿಯೂ ಸೂಕ್ತ ಮಾರ್ಗದರ್ಶನ ಮತ್ತು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad
