ಕಾರವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಐವಾನ್ ಡಿಸೋಜಾ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಕಾನೂನು ತಜ್ಞರಾಗಿರುವ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜನಪರ ಕೆಲಸಗಳನ್ನು ಮಾಡಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ ಎಂದು ಶ್ಲಾಘಿಸಿದರು.
ಕಾರವಾರ–ಅಂಕೋಲಾ ಕ್ರಿಶ್ಚಿಯನ್ ಫೋರಂ ಅಧ್ಯಕ್ಷ ಲಿಯೋ ಲೂಯಿಸ್ ಅವರು ಮಾತನಾಡಿ, ಐವನ್ ಡಿಸೋಜ ಅವರು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆ, ಭ್ರಷ್ಟಾಚಾರದ ವಿರುದ್ಧದ ಹೋರಾಟ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಸದನದಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದರು.
ಅನುಭವ ಮತ್ತು ಹೋರಾಟದ ಹಿನ್ನಲೆ ಹೊಂದಿರುವ ಐವನ್ ಡಿಸೋಜಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಮೂಲಕ ಪಕ್ಷವು ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಬೇಕು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕತ್ವಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಸ್ಯಾಮಸನ್ ಡಿಸೋಜ, ಸ್ಟೀಫನ್ ರೊಡ್ರಿಗಸ್ ಸೇರಿದಂತೆ ಹಲವರು ಇದ್ದರು.
ಮುಖ್ಯಾಂಶ
▸ ಐವನ್ ಡಿಸೋಜಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ಒತ್ತಾಯ
▸ ಸಾಮಾಜಿಕ ನ್ಯಾಯ ಮತ್ತು ಅಲ್ಪಸಂಖ್ಯಾತರ ಪರ ಹೋರಾಟಕ್ಕೆ ಮೆಚ್ಚುಗೆ
▸ ಕಾಂಗ್ರೆಸ್ ನಾಯಕತ್ವಕ್ಕೆ ಮನವಿ ಸಲ್ಲಿಕೆ
What do you feel about this post?
Like
Love
Happy
Haha
Sad
