ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಎಮ್ಯನರೇಷನ್ ಫಾರಂ ಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಹೇಳಿದರು.
ಶನಿವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕಕರಣೆ (ಎಸ್ಆಯ್ಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಿಗೆ ಸಮರ್ಪಕ ಮಾಹಿತಿ ತಲುಪಿಸುವ ಜವಾಬ್ದಾರಿ ಕಂದಾಯ ಇಲಾಖೆ, ಆರ್ಡಿಪಿಆರ್, ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳ ಮೇಲಿದ್ದು, ಈಗಾಗಲೇ ಜಾಥಾ, ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಪತ್ರ ಬರೆಯಿಸುವ ಕಾರ್ಯಕ್ರಮ ಹಾಗೂ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮತ್ತು ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿ ದೂರ ಉಳಿಯಬಾರದು ಎಂದರು.
ಪ್ರತೀ ದಿನ ಒತ್ತಡದಿಂದ ಕೆಲಸ ಕಾರ್ಯನಿರ್ವಸುವ ಅಧಿಕಾರಿ ಸಿಬ್ಬಂದಿಗಳಿಗೆ ಕ್ರೀಡೆಯಿಂದ ನೆಮ್ಮದಿ, ಮನರಂಜನೆ, ಜೊತೆಗೆ ಸಮನ್ವಯ ಬೆಳೆಯಲು ಸಾಧ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬಿಬ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ, ತಾಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವೀರಣ್ಣ ಏಗನಗೌಡರ್,ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ.ಹರಿಕಾಂತ್ ಮತ್ತಿತರರು ಇದ್ದರು.
ಜಿಲ್ಲಾ ಪಂಚಾಯತ್ ತಂಡ, ಕಂದಾಯ ಇಲಾಖೆ ತಂಡ, ಪೊಲೀಸ್ ಇಲಾಖೆ ತಂಡ ಹಾಗೂ ಪತ್ರಕರ್ತರ ತಂಡಗಳು ಕ್ರಿಕೆಟ್ ಆಟದಲ್ಲಿ ಭಾಗವಹಿಸಿದ್ದು, ಪೊಲೀಸ್ ತಂಡದ ವಿರುದ್ದದ ಪಂದ್ಯದಲ್ಲಿ ಜಿಲ್ಲಾ ಪಂಚಾಯತ ತಂಡದ ಪರ ಆರಂಭಿಕ ಆಟಗಾರರಾಗಿ ಆಡಿದ ಜಿಲ್ಲಾ ಪಂಚಾಯತ ಕಾರ್ಯ ನಿರ್ವಹಕಾಧಿಕಾರಿ ಡಾ. ದಿಲೀಶ್ ಶಶಿ , ಕೊನೆಯ ಓವರ್ವರೆಗೂ ತಂಡದ ಆಧಾರ ಸ್ತಂಭವಾಗಿ ನಿಂತು ,ಉತ್ತಮ ಜೊತೆಯಾಟಗಳ ಮೂಲಕ ತಂಡದ ಮೊತ್ತ ಹೆಚ್ಚಿಸುವಲ್ಲಿ ತಮ್ಮ ಕೊಡುಗೆ ನೀಡುವುದರ ಜೊತೆಯಲ್ಲಿ ಇತರ ಆಟಗಾರರಿಗೆ ಕ್ರೀಡಾ ಸ್ಪೂರ್ತಿಯಾದರು. ಕಂದಾಯ ಇಲಾಖೆ ವಿರುದ್ದ ನಡೆದ ಫೈನಲ್ ಪಂದ್ಯದಲ್ಲಿ ಪೊಲೀಸ್ ತಂಡ ವಿಜಯದ ನಗೆ ಬೀರಿತು.
What do you feel about this post?
Like
Love
Happy
Haha
Sad



