ಮಂಗಳೂರು: ವರ್ಷಗಳಿಂದ ನಗರದ ಅಭಿವೃದ್ಧಿಗೆ ಸವಾಲಾಗಿರುವ ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ₹1,250 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧವಾಗಿದ್ದು, ಮೊದಲ ಹಂತದ ₹350 ಕೋಟಿ ಕಾಮಗಾರಿಗೆ ಇಲಾಖಾ ಮಟ್ಟದಲ್ಲಿ ಅನುಮೋದನೆ ದೊರೆತಿದೆ. ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆಗೆ ಅಂತಿಮ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.
ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೊದಲ ಹಂತದ ಕಾಮಗಾರಿಗೆ ಸ್ಥಳದಲ್ಲೇ ಮಂಜೂರಾತಿ ನೀಡಲಾಗಿದೆ. ಸಂಪುಟ ಸಭೆಯಲ್ಲಿ ಕಡತ ಮಂಡನೆಯಾಗಲಿದ್ದು, ಅನುಮೋದನೆ ದೊರೆತ ಬಳಿಕ ಹಣ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗಲಿದೆ ಎಂದರು.
ಜಲಸಿರಿ ಯೋಜನೆಯಡಿ ಮಂಗಳೂರಿಗೆ ₹60 ಕೋಟಿ ಹಾಗೂ ಪುತ್ತೂರು–ಕುಂದಾಪುರಕ್ಕೆ ಒಟ್ಟು ₹160 ಕೋಟಿ ಸೇರಿ ₹220 ಕೋಟಿ ಅನುದಾನದ ಬೇಡಿಕೆಯನ್ನು ಸಂಪುಟಕ್ಕೆ ಸಲ್ಲಿಸಲಾಗಿದೆ. ಹಣ ಹೊಂದಿಸಲು ನಿಯಮ ಸಡಿಲಿಕೆ ಮಾಡುವ ಪ್ರಸ್ತಾವನೆಯೂ ಇದ್ದು, ಇದಕ್ಕೂ ಅನುಮೋದನೆ ದೊರೆಯುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.
ಜಲಸಿರಿ ಕಾಮಗಾರಿ ವಿಳಂಬ ಹಾಗೂ ರಸ್ತೆ ಅಗೆತದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಶಾಸಕ ಐವನ್ ಡಿಸೋಜಾ ಪ್ರಸ್ತಾಪಿಸಿದರು. 2027ರ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದರು. ಕಳೆದ ಆರು ವರ್ಷಗಳಲ್ಲಿ ಮನೆ ನಳ ಸಂಪರ್ಕದ ಶೇ.35ರಷ್ಟು ಕಾಮಗಾರಿ ಮಾತ್ರ ಪೂರ್ಣಗೊಂಡಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ನಿಗದಿತ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು; ಮುಂದಿನ ಸಭೆಯಲ್ಲಿ ಇದೇ ವಿಷಯ ಮತ್ತೆ ಚರ್ಚೆಗೆ ಬರಬಾರದು ಎಂದು ಸೂಚನೆ ನೀಡಿದರು.
ಬಹುಮಹಡಿ ಮಾರುಕಟ್ಟೆಗಳಿಂದ ಹಿರಿಯ ನಾಗರಿಕರು ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಮುಂದಿನ ಮಾರುಕಟ್ಟೆಗಳು ಸಣ್ಣ–ಮಧ್ಯಮ ವ್ಯಾಪಾರಿಗಳು ಹಾಗೂ ಸಾರ್ವಜನಿಕ ಸ್ನೇಹಿಯಾಗುವಂತೆ ನಿರ್ಮಿಸುವಂತೆ ತಿಳಿಸಿದರು.
‘ಪಾಲಿಕೆ ಸಂಪೂರ್ಣ ಡಿಜಿಟಲ್ ಆಗದಿರುವುದು ಸರಿಯಲ್ಲ’
ಮಂಗಳೂರು ಮಹಾನಗರ ಪಾಲಿಕೆ ಇನ್ನೂ ಸಂಪೂರ್ಣ ಡಿಜಿಟಲೀಕರಣಗೊಂಡಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ಹಾಗೂ ಪಾಲಿಕೆಯ ಕಾಮಗಾರಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ಧರಾಮಯ್ಯ ಸೂಚಿಸಿದರು.
ಮುಂದಿನ 25 ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನೀರು ಸಂಗ್ರಹ, ಪೂರೈಕೆ ಹಾಗೂ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಗಳನ್ನು ಈಗಿನಿಂದಲೇ ಬಲಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ಕಿಶೋರ್ ಕುಮಾರ್, ಪಿ.ವಿ. ಮೋಹನ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮತ್ತಿತರರು ಇದ್ದರು.
What do you feel about this post?
Like
Love
Happy
Haha
Sad






